– ರಾಘವೇಂದ್ರ ಅಡಿಗ ಎಚ್ಚೆನ್.
‘ಸಿದ್ಲಿಂಗು’, ‘ನೀರ್ ದೋಸೆ’ ಖ್ಯಾತಿಯ ವಿಜಯಪ್ರಸಾದ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ‘ಸಿದ್ಲಿಂಗು 2’ ಚಿತ್ರ ಫೆಬ್ರವರಿ 14 ಪ್ರೇಮಿಗಳ ದಿನದಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಮೊದಲ ವೀಡಿಯೋ ಹಾಡು ನಿನ್ನೆ ಸಂಜೆ ನಾಗದೇವನಹಳ್ಳಿ ಬಳಿಯ ಅನಾಥಶ್ರಮದಲ್ಲಿ ಬಿಡುಗಡೆಯಾಗಿದೆ.
‘ಕಥೆಯೊಂದು’ ಎಂದು ಶುರುವಾಗುವ ಈ ಹಾಡನ್ನು ಅರಸು ಅಂತಾರೆ ಬರೆದರೆ, ಅನೂಪ್ ಸೀಳಿನ್ ಸಂಗೀತ ಸಂಯೋಜಿಸುವುದರ ಜೊತೆಗೆ, ಹಾಡಿಗೆ ಧ್ವನಿಯಾಗಿದ್ದಾರೆ. ನಾಯಕ ಯೋಗಿ ಮತ್ತು ನಾಯಕಿ ಸೋನು ಗೌಡ ಅಭಿನಯದಲ್ಲಿ ಈ ಹಾಡು ಮೂಡಿಬಂದಿದೆ.
ನಟ ಯೋಗಿ ಮಾತನಾಡಿ, ‘ಈ ಚಿತ್ರದ ಮುಹೂರ್ತ ಕಳೆದ ವರ್ಷ ದೇವರ ಎದುರು ಆಗಿತ್ತು. ಈಗ ಚಿತ್ರದ ಮೊದಲ ಹಾಡು ದೇವರ ಮಕ್ಕಳ ಎದುರು ಬಿಡುಗಡೆಯಾಗುತ್ತಿದೆ. ಚಿತ್ರ ಬಹಳ ಚೆನ್ನಾಗಿ ಮೂಡಿ ಬಂದಿದೆ. ನಾವೆಲ್ಲರೂ ಬಹಳ ಎಕ್ಸೈಟ್ ಆಗಿದ್ದೇವೆ. ತುಂಬಾ ಕಷ್ಟಪಟ್ಟು ಮಾಡಿರುವ ಸಿನಿಮಾ ಇದು. ತುಂಬಾ ಅವಮಾನಗಳನ್ನು ಎದುರಿಸಿ ಮಾಡಿರುವ ಸಿನಿಮಾ. ನಿರ್ಮಾಪಕರಾದ ಹರಿ ಮತ್ತು ರಾಜು, ನಮ್ಮ ಕಷ್ಟದ ಸಮಯದಲ್ಲಿ ಬಂದು ನಮ್ಮ ಜೊತೆಗೆ ಸಿನಿಮಾ ಮಾಡಿದ್ದಾರೆ ಎಂದರು.
ನಿರ್ದೇಶಕ ವಿಜಯಪ್ರಸಾದ್ ಮಾತನಾಡಿ, ‘ಐಷಾರಾಮಿ ಹೋಟೆಲ್ಗಳಲ್ಲಿ, ಸೆಲೆಬ್ರಿಟಿಗಳ ಮಧ್ಯೆ ಹಾಡುಗಳನ್ನು ಬಿಡುಗಡೆ ಮಾಡುವುದು ಸರ್ವೇ ಸಾಮಾನ್ಯ. ಆದರೆ, ‘ಸಿದ್ಲಿಂಗು 2’ ಚಿತ್ರತಂಡದವರಿಗೆ ಮನಸುಗಳ ಮಧ್ಯೆ, ಒಳ್ಳೆಯ ಮನಸುಗಳಿರುವ ಮನುಷ್ಯರ ಮಧ್ಯೆ ಹಾಡು ಬಿಡುಗಡೆ ಮಾಡಿದರೆ ಅರ್ಥಪೂರ್ಣ ಎಂಬ ಕಾರಣಕ್ಕೆ ಇಲ್ಲಿ ಹಾಡು ಬಿಡುಗಡೆ ಮಾಡುತ್ತಿದ್ದೇವೆ. ಅನೂಪ್ ಸೀಳಿನ್ ಜೀವಂತವಾಗಿರುವ ಹಾಡೊಂದನ್ನು ಕೊಟ್ಟಿದ್ದಾರೆ. ಅಷ್ಟೇ ಜೀವಂತವಾದ ಸಾಹಿತ್ಯವನ್ನು ಅರಸು ಬರೆದಿದ್ದಾರೆ. ನಿಮ್ಮೆಲ್ಲರ ಸಹಕಾರ ಮತ್ತು ಬೆಂಬಲ ಈ ತಂಡದ ಮೇಲಿರಲಿ ಎಂದರು.
‘ಸಿದ್ಲಿಂಗು 2’ ಚಿತ್ರವನ್ನು ಶ್ರೀಹರಿ ಮತ್ತು ರಾಜು ಶೇರಿಗಾರ್ ನಿರ್ಮಿಸಿದ್ದು, ಯೋಗಿ, ಸೋನು ಗೌಡ, ಸುಮನ್ ರಂಗನಾಥ್, ಗಿರಿಜಾ ಲೋಕೇಶ್, ಮಹಾಂತೇಶ್, ಆ್ಯಂಟೋನಿ ಕಮಲ್, ಮಂಜುನಾಥ ಹೆಗಡೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಪ್ರಸನ್ನ ಗುರ್ಲಕೆರೆ ಛಾಯಾಗ್ರಹಣ ಮತ್ತು ಅಕ್ಷಯ್ ಪಿ. ರಾವ್ ಅವರ ಸಂಕಲನವಿದೆ. ‘ಭೀಮ’ ಚಿತ್ರದ ನಿರ್ಮಾಪಕ ಜಗದೀಶ್ ಈ ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ.