ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ರಾಯಚೂರು ಜಿಲ್ಲೆಯು ಉತ್ತಮ ಸ್ಥಾನ ಕಾಯ್ದುಕೊಳ್ಳುವ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಹಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ  ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ರಾಯಚೂರು ಜಿಲ್ಲೆಯು ಪ್ರತಿ ಬಾರಿ ಕಳಪೆ ಸಾಧನೆ ತೋರುತ್ತಿದೆ. ಇದು ಆರೋಗ್ಯಕರ ಬೆಳವಣಿಗೆಯಲ್ಲ.  ವಿಶೇಷವಾಗಿ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಓ ಅವರು ಇದರ ಜವಾಬ್ದಾರಿ ಪಡೆದುಕೊಂಡು ಫಲಿತಾಂಶ ಸುಧಾರಣೆಗಾಗಿ ಸರ್ಕಾರಿ ಶಾಲೆಗಳಲ್ಲಿ ಏನು ಮಾಡಬಹುದು ಎಂಬುದರ ಬಗ್ಗೆ ಯೋಚಿಸಿ ಸುವ್ಯವಸ್ಥಿತ ಕಾರ್ಯ ಯೋಜನೆ ರೂಪಿಸಬೇಕು ಎಂದು ಸಚಿವರು ತಿಳಿಸಿದರು.

ಫಲಿತಾಂಶ ಸುಧಾರಣೆಗೆ ಸಂಬಂಧಿಸಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಪ್ರತಿ ಹಳ್ಳಿಗೆ ಒಬ್ಬರಂತೆ ಮತ್ತು ತಾಲೂಕುಮಟ್ಟದ ಅಧಿಕಾರಿಗಳನ್ನು ಪ್ರತಿ ಶಾಲೆಗೆ ಒಬ್ಬರಂತೆ ನೊಡಲ್ ಅಧಿಕಾರಿಗಳಾಗಿ ನೇಮಿಸಿ ಕಾರ್ಯಹಂಚಿಕೆ ಮಾಡಬೇಕು ಎಂದು ಸೂಚಿಸಿದರು.

ಪರೀಕ್ಷೆಗೆ ಈಗಿನಿಂದಲೇ ಸಿದ್ಧರಾಗಿ: ಶಿಕ್ಷಣದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಮಹತ್ವದ ಹಂತಗಳಾಗಿವೆ. ಬಹಳಷ್ಟು ಮಕ್ಕಳಲ್ಲಿ ಪರೀಕ್ಷಾ ಭಯ ಇರುತ್ತದೆ. ಹಾಗಾಗಿ ಮೇಲಿಂದ ಮೇಲೆ ಕಿರು ಪರೀಕ್ಷೆ ಮತ್ತು ವಿಶೇಷ ತರಗತಿಗಳನ್ನು ನಡೆಸಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು. ಒಟ್ಟಾರೆ ಫಲಿತಾಂಶ ಸುಧಾರಣೆಗೆ ಶಾಲಾ ಶಿಕ್ಷಣ ಇಲಾಖೆ ಮತ್ತು ಪಿಯು ಶಿಕ್ಷಣ ಇಲಾಖೆಗಳು ಈಗಿಂದಲೇ ಸನ್ನದ್ದವಾಗಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ಅಧಿಕಾರಿಗಳಿಗೆ ಎಚ್ಚರಿಕೆ: ಶಾಲಾ ಕಾಲೇಜುಗಳಲ್ಲಿ ಫಲಿತಾಂಶ ಸುಧಾರಣೆಗೆ ನಿಮ್ಮಲ್ಲಿ ಪ್ಲಾನ್ ಇದೆಯಾ? ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಪ್ರಶ್ನಿಸಿದ ಸಚಿವರು, ಫಲಿತಾಂಶ ಕುಸಿಯಲು ಶಿಕ್ಷಕರ ಕೊರತೆ ಕಾರಣ ಎಂಬುದರಲ್ಲಿ ಹುರುಳಿಲ್ಲ. ನಮ್ಮಲ್ಲಿ ಶಿಕ್ಷಕರ ಕೊರತೆ ಇಲ್ಲ. ಶಾಲಾ ಕಾಲೇಜುಗಳಿಗೆ ನಿಯಮಿತ ಭೇಟಿ ನೀಡಿ, ಶಿಕ್ಷಕರ ಮತ್ತು ಮಕ್ಕಳ ಹಾಜರಾತಿ ಮತ್ತು ಕಲಿಕೆಯ ಗುಣಮಟ್ಟ‌ ಪರಿಶೀಲಿಸದೆ ಮಾನಿಟರಿಂಗ್ ಮಾಡುವಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಿಂದೆ ಬಿದ್ದಿರುವುದೇ ಫಲಿತಾಂಶ ಕುಸಿಯಲು ಕಾರಣವಾಗಿದೆ. ಇನ್ನು ಮುಂದೆ ಈ ರೀತಿಯಾದರೆ ತಕ್ಕ ಶಾಸ್ತಿ ಎದುರಿಸಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಸಚಿವರು ಎಚ್ಚರಿಸಿದರು.

ಶಾಲೆಗಳಿಗೆ ಶೌಚಾಲಯವಿಲ್ಲ: ಸಿಂಧನೂರಿನ ಬಹುತೇಕ ಶಾಲೆಗಳಿಗೆ ಶೌಚಾಲಯಗಳಿಲ್ಲ. ಬಹುತೇಕ ಶಾಲೆಗಳಲ್ಲಿ ಕಂಪ್ಯೂಟರ್ ಹಾಳಾಗಿವೆ. ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ಕಲಿಸುವವರು ಇಲ್ಲದಂತಾಗಿದೆ ಎಂದು ವಿಧಾನ ಪರಿಷತ್ ಶಾಸಕರಾದ ಬಸನಗೌಡ ಬಾದರ್ಲಿ ದೂರಿದರು.

ಕಮಿಟಿ ರಚಿಸಿ: ನಮ್ಮ ಜಿಲ್ಲೆಯ ಮಕ್ಕಳು ಪ್ರತಿಭಾನ್ವಿತರಿದ್ದಾರೆ. ಆದರೆ ಕೆಲವು ಶಿಕ್ಷಕರು ಮತ್ತು ಉಪನ್ಯಾಸಕರ ನಿಷ್ಕಾಳಜಿಯಿಂದಾಗಿ ಫಲಿತಾಂಶ ಕುಸಿಯುತ್ತಿದೆ. ಈ ಬಗ್ಗೆ ಸಮಗ್ರ ಚಿಂತನ ಮಂಥನ ನಡೆಸಿ ಕಾರ್ಯಯೋಜನೆ ರೂಪಿಸಲು ಜಿಲ್ಲಾ ಪಂಚಾಯತ್ ಸಿಇಓ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಕಮಿಟಿ ರಚಿಸಬೇಕು ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರು ಸಲಹೆ ನೀಡಿದರು.

ಹತ್ತು ಸಾವಿರ ಸಸಿ ನೆಡಿಸಿ: ಉತ್ತಮವಾದ ಪರಿಸರ ಸಿಗುವ ನಿಟ್ಟಿನಲ್ಲಿ ರಾಯಚೂರು ನಗರದಲ್ಲಿ ಪ್ರತಿ ವರ್ಷ ಹತ್ತು ಸಾವಿರ ಸಸಿ ನೆಟ್ಟು ಪೋಷಣೆ ಮಾಡಬೇಕು. ಎಲ್ಲ ತಾಲೂಕುಗಳಲ್ಲಿ ಸಹ ಗರಿಷ್ಟ ಮಟ್ಟದಲ್ಲಿ ಸಸಿ ನೆಡಲು ಕ್ರಮವಹಿಸಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.

ತಾಲೂಕು ಆಸ್ಪತ್ರೆ ಬೇಕು: ರಾಯಚೂರು ಗ್ರಾಮೀಣ ಕ್ಷೇತ್ರದ ಜನರಿಗೆ ಅನುಕೂಲವಾಗುವ ಹಾಗೆ ತಾಲೂಕು ಆಸ್ಪತ್ರೆ ಮಂಜೂರಾತಿಗೆ ಪ್ರಸ್ತಾವನೆ ಕಳುಹಿಸುವಂತೆ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ತಿಳಿಸಿದರು.

ಲಿಂಗಸೂರ ತಾಲೂಕಿನ ಜನತೆಗೆ ಅನ್ಯಾಯವಾಗದ ಹಾಗೆ 50‌ ಬೆಡ್ ನ ಕ್ರಿಟಿಕಲ್ ಕೇರ್ ಆಸ್ಪತ್ರೆಯನ್ನು ಲಿಂಗಸೂರಗೆ ಕೊಡಲು ಪರಿಶೀಲಿಸಬೇಕು ಎಂದು ವಿಧಾನ ಪರಿಷತ್ ಶಾಸಕರಾದ ಶರಣಗೌಡ ಪಾಟೀಲ ಬಯ್ಯಾಪುರ ಅವರು ತಿಳಿಸಿದರು.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ