– ರಾಘವೇಂದ್ರ ಅಡಿಗ ಎಚ್ಚೆನ್.
ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (114) ಇಂದು ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಾಲುಮರದ ತಿಮ್ಮಕ್ಕ ಅವರ ಸಾಮಾಜಿಕ ಸೇವೆಗಾಗಿ ಕೇಂದ್ರ ಸರ್ಕಾರ ಅವರಿಗೆ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌವರವಿತ್ತು. ಶತಾಯುಷಿ ‘ವೃಕ್ಷ’ಮಾತೆ ಸಾಲುಮರದ ತಿಮ್ಮಕ್ಕ ಇನ್ನು ನೆನೆಪು ಮಾತ್ರ.
ತಿಮ್ಮಕ್ಕ ಅವರು ಸುಮಾರು 8,000ಕ್ಕೂ ಹೆಚ್ಚು ಮರಗಳನ್ನು ನೆಟ್ಟಿದ್ದು, ರಸ್ತೆ ಬದಿಗಳಲ್ಲಿ ಪರಿಸರ ಸಂರಕ್ಷಣೆ ಮಾಡಲು ಮರಗಳ ಪೋಷಣೆ ಮಾಡಿದ್ದಾರೆ. ಅವರ ಸಾಮಾಜಿಕ ಸೇವೆಗಾಗಿ
1995ರಲ್ಲಿ ಭಾರತದ ರಾಷ್ಟ್ರೀಯ ನಾಗರಿಕ ಪ್ರಶಸ್ತಿ ಗೌರವ, 2010ನೇ ವರ್ಷದಲ್ಲಿ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಗೌರವ, 2020ರಲ್ಲಿ ಕರ್ನಾಟಕ ಕೇಂದ್ರೀಯ ವಿವಿಯಿಂದ ಗೌರವ ಡಾಕ್ಟರೇಟ್, ರಾಜ್ಯೋತ್ಸವ ಪ್ರಶಸ್ತಿ ಸೇರಿ ಹತ್ತಾರು ಪ್ರಶಸ್ತಿ, ಪುರಸ್ಕಾರಗಳು ಸಿಕ್ಕಿದೆ.
ಸಾಲುಮರದ ತಿಮ್ಮಕ್ಕ ಅವರು ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದ್ದು, ತಂದೆ ಚಿಕ್ಕರಂಗಯ್ಯ, ತಾಯಿ ವಿಜಯಮ್ಮ. ತಿಮ್ಮಕ್ಕ ಅವರು ಮಕ್ಕಳಿರದ ದುಃಖ ಮರೆಯಲು ಆಲದ ಮರಗಳನ್ನು ನೆಟ್ಟಿದ್ದರು. ಕುದೂರಿನಿಂದ ಹುಲಿಕಲ್ ತನಕವಿರುವ ರಾಜ್ಯ ಹೆದ್ದಾರಿಯಲ್ಲಿ ಮರಗಳ ಪೋಷಣೆ ಮಾಡಿದ್ದಾರೆ.





