ಹೊಸ ವರ್ಷಾಚರಣೆ ಸಂಭ್ರಮಾಚರಣೆಗೆ ಸಿಲಿಕಾನ್ ಸಿಟಿ ಬೆಂಗಳೂರು ಸಜ್ಜಾಗಿದ್ದು, ನಗರದ ಪ್ರಮುಖ ಸ್ಥಳಗಳಾದ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ  ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.

ರಸ್ತೆಗಳ ಮೇಲಿನ ಕಣ್ಣಾವಲಿಗೆ ಪ್ರತ್ಯೇಕ ಸಿಸಿಟಿವಿ ನಿಯಂತ್ರಣ ಕೊಠಡಿ ತೆರೆಯಲಾಗಿದ್ದು, ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್ ಗಳಲ್ಲಿ ಸುಮಾರು 3,400 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕೃತಕ ಬುದ್ದಿಮತ್ತೆ (ಎಐ) ಕ್ಯಾಮೆರಾ ಬಳಸಿ ಕಣ್ಣಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕ್ಯಾಮೆರಾಗಳ ಪೈಕಿ 400 ಪೊಲೀಸರು ಹಾಗೂ 3 ಸಾವಿರ ಖಾಸಗಿಯವರಿಗೆ ಸೇರಿದ ಕ್ಯಾಮೆರಾಗಳಾಗಿವೆ. ಹೊಸ ವರ್ಷಾಚರಣೆ ವೇಳೆ ಗುಂಪಿನಲ್ಲಿ ಸಣ್ಣ ಗಲಭೆ ನಡೆದರೂ ಮಾಹಿತಿ ಪಡೆಯಬಹುದು. ಪ್ರತಿ 50 ಮೀಟರ್‌ಗೂ ಕ್ಯಾಮೆರಾಗಳಿದ್ದು ಸಂಪೂರ್ಣ ಕಣ್ಣಾವಲಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ವಿಭಾಗಕ್ಕೆ ಮಾತ್ರವಲ್ಲದೆ ಈ ಕ್ಯಾಮರಾಗಳನ್ನು ಪೊಲೀಸ್ ಆಯುಕ್ತರ ಕಚೇರಿಗೆ ಸಹ ಸಂಪರ್ಕ ಕಲ್ಪಿಸಲಾಗಿದೆ. ಪ್ರತಿ ಕ್ಷಣದ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಹೊಸ ಸಂಭ್ರಮಾಚರಣೆಯ ದಿನದಂದು ಕಾನೂನು ಸುವ್ಯವಸ್ಥೆಯ 14 ಸಾವಿರ ಪೊಲೀಸರು, 2500 ಸಂಚಾರ ಪೊಲೀಸರು, 88 ಕೆಎಸ್‌ಆರ್‌ಪಿ ತುಕಡಿ, 21 ಸಿಎಆರ್, 266 ಹೊಯ್ಸಳ ವಾಹನ, 250 ಕೋಬ್ರಾ ವಾಹನಗಳನ್ನು ನಿಯೋಜಿಸಲಾಗುತ್ತಿದೆ. 400 ಟ್ರಾಫಿಕ್ ವಾರ್ಡನ್ ಗಳನ್ನು ನಿಯೋಜಿಸಲಾಗಿದೆ. ಜನದಟ್ಟಣೆ ನಿಯಂತ್ರಿಸಲು ವಾಟರ್‌ಜೆಟ್, ಸಿವಿಲ್ ಡಿಫೆನ್ಸ್, ಹೋಮ್ ಗಾರ್ಡ್ ಸೇರಿದಂತೆ ಒಟ್ಟು 20 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.

ಸಂಭ್ರಮಾಚರಣೆ ನಡೆಯುವ ಸ್ಥಳಗಳಲ್ಲಿ 400ಕ್ಕೂ ಹೆಚ್ಚು ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಸೇಫ್ಟಿ ಶೆಲ್ಟರ್‌ಗಳು, ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ. ಜನದಟ್ಟಣೆಯಿರುವ ಕಡೆ ಡ್ರೋನ್​ ಕ್ಯಾಮೆರಾಗಳಿಂದ ಪೊಲೀಸರು ನಿಗಾವಹಿಸಲಿದ್ದಾರೆ.

ಬಾರ್, ರೆಸ್ಟೋರೆಂಟ್, ಮಾಲ್‌ಗಳಮಾಲೀಕರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಎಂ.ಜಿ ರಸ್ತೆ, ಬ್ರಿಗೆಡ್‌ಸ್ತೆಗಳಲ್ಲಿ ಇಂದಿರಾನಗರ, ಕೋರಮಂಗಲ, ಎಲೆಕ್ಟ್ರಾನಿಕ್ ಸಿಟಿಯ ಸೇರಿದಂತೆ ಇತರೆ ಕಡೆಗಳಲ್ಲಿ ಇರುವ ಬಾರ್, ಪಬ್, ಹೋಟೆಲ್, ಲಾಡ್ಜ್‌ಗಳಿಗೆ ಪೊಲೀಸರು ಭೇಟಿ ನೀಡಿ ಭದ್ರತೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಮುಖಚರ್ಯೆ ಗುರುತಿಸುವ ಎಐ ಕ್ಯಾಮೆರಾಗಳನ್ನು ಅಳವಡಿಸ ಲಾಗಿದೆ. ಅಪರಾಧ ಚಟುವಟಿಕೆ ಹಿನ್ನೆಲೆಯುಳ್ಳವರ ಮಾಹಿತಿ ಎಐ ಕ್ಯಾಮೆರಾದಿಂದ ಗೊತ್ತಾಗಲಿದೆ. ಅಂತಹವರು ಕಂಡು ಬಂದರೆ ಕೂಡಲೇ ಎಐ ಕ್ಯಾಮೆರಾ ಎಚ್ಚರಿಕೆ ನೀಡಲಿದೆ.

ಇದೇ ಮೊದಲ ಬಾರಿಗೆ ಹೀಟ್ ಮ್ಯಾಪ್ ಮಾಡಲಾಗಿದ್ದು, ಅತೀ ಹೆಚ್ಚು ಜನ ಸೇರಿರುವ ಸ್ಥಳಗಳನ್ನು ಕೆಂಪು ಬಣ್ಣದಿಂದ ಗುರುತಿಸಲಾಗುತ್ತದೆ. ಹಳದಿ ಬಣ್ಣದಿಂದ ಗುರುತಿಸುವ ಸ್ಥಳಗಳನ್ನು ಹೆಚ್ಚಿನ ಜನ ಸೇರುತ್ತಿರುವುದನ್ನು ಸೂಚಿಸುತ್ತದೆ. ಹಸಿರು ಬಣ್ಣ ಇರುವುದು ಕಡಿಮೆ ಜನ ಇರುವುದನ್ನು ಗುರುತಿಸಬಹುದು. ಇದನ್ನು ಕಮಾಂಡ್ ಸೆಂಟರ್‌ನಿಂದ ನಿಗಾ ವಹಿಸಲಾಗುತ್ತದೆ.

ಈ ನಡುವೆ ನಗರದ ಕೆ.ಆರ್. ಮಾರುಕಟ್ಟೆ, ಯಶವಂತಪುರ, ಹೆಬ್ಬಾಳ, ಪೀಣ್ಯ, ಜಯನಗರ ಸೇರಿದಂತೆ ಪ್ರಮುಖ ಪೈಓವರ್‌ಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬುಧವಾರ ರಾತ್ರಿ ಬಂದ್ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ