– ರಾಘವೇಂದ್ರ ಅಡಿಗ ಎಚ್ಚೆನ್.
ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿರುವ ಅಶ್ಲೀಲ ಕಮೆಂಟ್ಗಳು ಮತ್ತು ಮೆಸೇಜ್ಗಳನ್ನು ಹಿಂದೆ ಸೆಲೆಬ್ರಿಟಿಗಳು ಮೌನವಾಗಿ ಸಹಿಸಿಕೊಳ್ಳುತ್ತಿದ್ದರು. ಆದರೆ ಇದೀಗ ಈ ರೀತಿಯ ನಿಂದನೆಯ ವಿರುದ್ಧ ನೇರವಾಗಿ ಧ್ವನಿ ಎತ್ತುತ್ತಿದ್ದಾರೆ. ಹಲವರು ಪೊಲೀಸ್ ಠಾಣೆಯ ಮೆಟ್ಟಿಲು ಏರುತ್ತಿರುವುದು ಕಾಣುತ್ತಿದೆ. ನಟಿ ರಮ್ಯಾ ಬಳಿಕ ಇದೀಗ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ನೀಡಿದ್ದ ದೂರಿನ ಪ್ರಕರಣದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯಲಕ್ಷ್ಮೀ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಮೆಂಟ್ಗಳು ಹಾಗೂ ಮೆಸೇಜ್ಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ಆದರೆ, ‘ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಇತ್ತೀಚೆಗೆ ವಿಜಯಲಕ್ಷ್ಮೀ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹೇಳಿಕೆಯ ಬೆನ್ನಲ್ಲೇ ಇದೀಗ ಪೊಲೀಸರು ಕಾರ್ಯಪ್ರವೃತ್ತರಾಗಿದ್ದು, ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಬೆಂಗಳೂರಿನ ಚಿಕ್ಕಬಾಣಾವರದ ಆಟೋ ಚಾಲಕ ಚಂದ್ರು ಹಾಗೂ ದಾವಣಗೆರೆ ಮೂಲದ ಇಂಜಿನಿಯರ್ ನಿತಿನ್ ಎಂದು ಗುರುತಿಸಲಾಗಿದೆ. ಇವರು ಸಾಮಾಜಿಕ ಜಾಲತಾಣಗಳ ಮೂಲಕ ವಿಜಯಲಕ್ಷ್ಮೀ ಅವರಿಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾಗಿ ತಿಳಿದುಬಂದಿದೆ. ಆರೋಪಿಗಳನ್ನು ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ತಪ್ಪಿಸಿಕೊಳ್ಳಲು ನಡೆದಿತ್ತು ಪ್ರಯತ್ನ
ವಿಜಯಲಕ್ಷ್ಮೀ ದೂರು ದಾಖಲಿಸಿದ ಬೆನ್ನಲ್ಲೇ ಆರೋಪಿಗಳು ತಾವು ಮಾಡಿದ ಅಶ್ಲೀಲ ಪೋಸ್ಟ್ಗಳನ್ನು ಡಿಲೀಟ್ ಮಾಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಆದರೆ ಪೊಲೀಸರು ಐಪಿ ಅಡ್ರೆಸ್ ಆಧಾರದಲ್ಲಿ ಆರೋಪಿಗಳ ಮೂಲ ಪತ್ತೆ ಹಚ್ಚಿದ್ದಾರೆ.
ಈ ಪ್ರಕರಣದಲ್ಲಿ ಇನ್ನಷ್ಟು ಮಂದಿ ಬಂಧನವಾಗುವ ಸಾಧ್ಯತೆ ಇದ್ದು, ಆರೋಪಿಗಳು ಯಾವ ನಟನ ಅಭಿಮಾನಿಗಳು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.





