ರಾಘವೇಂದ್ರ ಅಡಿಗ ಎಚ್ಚೆನ್.

ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಸಿನಿಮಾ ಪೈರಸಿ ವಿರುದ್ಧ ರಾಜ್ಯಸಭೆಯಲ್ಲಿ ಧ್ವನಿ ಎತ್ತಿದ್ದು, ಅದರ ಫಲವಾಗಿ ಕೇಂದ್ರ ಸರ್ಕಾರದಿಂದ ಕಠಿಣ ಕ್ರಮಗಳ ಭರವಸೆ ದೊರೆತಿದೆ. ಈ ಕುರಿತು ಜಗ್ಗೇಶ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಚಿತ್ರರಂಗದವರಿಂದ ಬೆಂಬಲ ಸಿಗದಿದ್ದ ಬೇಸರವನ್ನೂ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭೆಯ ಶೂನ್ಯ ವೇಳೆಯಲ್ಲಿ ಪೈರಸಿ ಕುರಿತಾಗಿ ಮಾತನಾಡಿದ ಜಗ್ಗೇಶ್, ಆಧುನಿಕ ತಂತ್ರಜ್ಞಾನ ಬಳಸಿ ಪೈರಸಿ ಮಾಡುವವರನ್ನು ಪತ್ತೆ ಹಚ್ಚಿ ದಂಡ ಹಾಗೂ ಜೈಲು ಶಿಕ್ಷೆ ವಿಧಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಇದರ ಪರಿಣಾಮವಾಗಿ, ಪೈರಸಿ ಆ್ಯಪ್‌ಗಳನ್ನು ಬಂದ್ ಮಾಡುವ ನಿರ್ಧಾರಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.
ಆದರೆ, ಈ ಹೋರಾಟದಲ್ಲಿ ಕನ್ನಡ ಚಿತ್ರರಂಗದವರಿಂದ ತಮಗೆ ನಿರೀಕ್ಷಿತ ಬೆಂಬಲ ದೊರೆಯಲಿಲ್ಲ ಎಂದು ಜಗ್ಗೇಶ್ ಬೇಸರ ವ್ಯಕ್ತಪಡಿಸಿದ್ದಾರೆ. “45 ವರ್ಷ ಚಿತ್ರರಂಗದ ಅನ್ನ ತಿಂದ ನಾನು ಅದರ ಋಣ ತೀರಿಸಲು ಮುಂದಾದಾಗ ಯಾರೂ ಬೆಂಬಲ ನೀಡಲಿಲ್ಲ” ಎಂದು ಅವರು ಪೋಸ್ಟ್‌ನಲ್ಲಿ ಹೇಳಿದ್ದಾರೆ.
ಪೈರಸಿಯಿಂದಾಗಿ ಇತ್ತೀಚೆಗೆ ‘ದಿ ಡೆವಿಲ್’, ‘ಮಾರ್ಕ್’, ‘45’ ಸೇರಿದಂತೆ ಹಲವು ಕನ್ನಡ ಸಿನಿಮಾಗಳು ಭಾರೀ ನಷ್ಟ ಅನುಭವಿಸಿದ್ದವು. ಈ ಹಿನ್ನೆಲೆ ಜಗ್ಗೇಶ್ ಅವರ ಹೋರಾಟಕ್ಕೆ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಬೆಂಬಲ ವ್ಯಕ್ತಪಡಿಸಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ