ರಾಘವೇಂದ್ರ ಅಡಿಗ ಎಚ್ಚೆನ್.

ಭಾರಿ ಉತ್ಸಾಹದಲ್ಲಿ ಟೀಸರ್ ಬಿಡುಗಡೆ ಮಾಡಿ, ಮುಖಭಂಗ ಎದುರಿಸಿದ ‘ದಿ ಕೇರಳ ಸ್ಟೋರಿ 2’ (The Kerala Story 2) ಚಿತ್ರತಂಡಕ್ಕೆ ಈಗ ಇನ್ನೊಂದು ಆಘಾತ ಎದುರಾಗಿದೆ. ಈ ಸಿನಿಮಾದ ಬಿಡುಗಡೆಯನ್ನು ಮುಂದಕ್ಕೆ ಹಾಕುವಂತೆ ಕೇರಳ ಹೈಕೋರ್ಟ್ (Kerala High Court) ಸೂಚನೆ ನೀಡಿದೆ. ಫೆಬ್ರವರಿ 27ರಂದು ‘ದಿ ಕೇರಳ ಸ್ಟೋರಿ 2’ ಚಿತ್ರವನ್ನು ರಿಲೀಸ್ ಮಾಡಲು ನಿರ್ಮಾಪಕರು ಸಜ್ಜಾಗಿದ್ದರು. ಆದರೆ ಕೇರಳದಲ್ಲಿ ಈ ಸಿನಿಮಾದ ಟೀಸರ್​​ಗೆ ಭಾರಿ ವಿರೋಧ ವ್ಯಕ್ತವಾಯಿತು. ಈ ಚಿತ್ರಕ್ಕೆ ಪ್ರಮಾಣಪತ್ರ ನೀಡಿದ ಸೆನ್ಸಾರ್ ಮಂಡಳಿಯ ಕ್ರಮವನ್ನು ಪ್ರಶ್ನಿಸಿ ಕೆಲವರು ಕೋರ್ಟ್ ಮೆಟ್ಟಲು ಹತ್ತಿದರು. ಅದರ ವಿಚಾರಣೆ ನಡೆಯುತ್ತಿದೆ.
‘ದಿ ಕೇರಳ ಸ್ಟೋರಿ 2’ ಸಿನಿಮಾದಲ್ಲಿ ಕೇರಳವನ್ನು ಕೆಟ್ಟದಾಗಿ ಬಿಂಬಿಸುವ ಪ್ರಯತ್ನ ಆಗಿದೆ. ಈ ಸಿನಿಮಾದಿಂದ ರಾಜ್ಯದಲ್ಲಿ ಕೋಮು ಗಲಭೆ ಉಂಟಾಗುವ ಸಾಧ್ಯತೆ ಇದೆ ಎಂದು ಆರೋಪಿಸಿ ಚಿತ್ರದ ವಿರುದ್ಧ ಕೇಸ್ ಹಾಕಲಾಯಿತು. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈಗ ಚಿತ್ರದ ಬಿಡುಗಡೆಗೆ ಹೈಕೋರ್ಟ್ ತಡೆ ನೀಡಿದೆ.
ಸಿನಿಮಾದ ವಿವಾದಕ್ಕೆ ಸಂಬಂಧಿಸಿದಂತೆ 3 ಅರ್ಜಿಗಳ ವಿಚಾರಣೆ ಬಾಕಿ ಇದೆ. ಆದರೆ ಶುಕ್ರವಾರವೇ ಸಿನಿಮಾ ಬಿಡುಗಡೆ ಆಗಬೇಕಿದೆ, ವಿದೇಶಿ ವಿತರಣೆ ಹಕ್ಕುಗಳು ಮಾರಾಟ ಆಗಿವೆ ಎಂದು ಕೋರ್ಟ್ ಗಮನಕ್ಕೆ ತರಲಾಯಿತು. ‘ಎಲ್ಲ ವಾದವನ್ನು ಆಲಿಸಬೇಕಿದೆ. ಅಲ್ಲಿಯ ತನಕ ಸಿನಿಮಾದ ಬಿಡುಗಡೆಯನ್ನು ಮುಂದಕ್ಕೆ ಹಾಕಿ’ ಎಂದು ಜಡ್ಜ್ ಸೂಚನೆ ನೀಡಿದರು. ಕಾಮಾಕ್ಯ ನಾರಾಯಣ್ ಸಿಂಗ್ ಅವರು ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ವಿಪುಲ್ ಅಮೃತ್​ಲಾಲ್ ಶಾ ಅವರು ನಿರ್ಮಾಣ ಮಾಡಿದ್ದಾರೆ. ಉಲ್ಕಾ ಗುಪ್ತಾ, ಅದಿತಿ ಭಾಟಿಯಾ, ಐಶ್ವರ್ಯಾ ಊಜಾ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಲವ್ ಜಿಹಾದ್ ಕುರಿತಾದ ಕಥೆ ಈ ಸಿನಿಮಾದಲ್ಲಿ ಇದೆ ಎಂಬುದು ಟೀಸರ್ ಮೂಲಕ ಗೊತ್ತಾಗಿದೆ.
2023ರಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿತ್ತು. ಅದರ ಸೀಕ್ವೆಲ್ ಆಗಿ ‘ದಿ ಕೇರಳ ಸ್ಟೋರಿ 2: ಗೋಸ್ ಬಿಯಾಂಡ್’ ಸಿನಿಮಾ ಸಿದ್ಧವಾಗಿದೆ. ಟೀಸರ್ ಬಿಡುಗಡೆ ಆದ ಬಳಿಕ ವಿವಾದ ಸೃಷ್ಟಿ ಆಯಿತು. ಚಿತ್ರಕ್ಕೆ ಪ್ರಮಾಣಪತ್ರ ನೀಡಿದ ಸೆನ್ಸಾರ್ ಮಂಡಳಿಯ ಕ್ರಮವನ್ನು ಪ್ರಶ್ನಿಸಲಾಗಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ