ಒಡಿಶಾದ ಎಸ್ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 11 ಮಂದಿ ರೋಗಿಗಳು ಮೃತಪಟ್ಟಿರುವ ದುರ್ಘಟನೆ ಸೋಮವಾರ ಮುಂಜಾನೆ ನಡೆದಿದೆ.
ಕಟಕ್ ನಗರದಲ್ಲಿರುವ ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯು ವಿಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸೋಮವಾರ ಮುಂಜಾನೆ ಸುಮಾರು 2.59 ಗಂಟೆ ವೇಳೆಗೆ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ನಡೆದ ವೇಳೆಗೆ ಐಸಿಯುನಲ್ಲಿ ಸುಮಾರು 15 ಮಂದಿ ರೋಗಿಗಳು ದಾಖಲಾಗಿದ್ದರು.
ಇವರಲ್ಲಿ ಹೆಚ್ಚಿನವರು ವೆಂಟಿಲೇಟರ್ ಹಾಗೂ ಆಕ್ಸಿಜನ್ ಸಹಾಯದೊಂದಿಗೆ ಇದ್ದುದರಿಂದ ಅವರನ್ನು ತಕ್ಷಣವೇ ಸ್ಥಳಾಂತರಿಸುವುದು ಕಷ್ಟವಾಗಿತ್ತು ಎಂದು ಮೂಲಗಳು ತಿಳಿಸಿವೆ. ಈ ನಡುವೆ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸುವ ಸಂದರ್ಭದಲ್ಲಿ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.
ಭುವನೇಶ್ವರ-ಕಟಕ್ ಪೊಲೀಸ್ ಆಯುಕ್ತ ಎಸ್ ದೇವ್ ದತ್ತ ಸಿಂಗ್ ಮಾತನಾಡಿ, ಈ ದುರಂತದಲ್ಲಿ 11 ಮಂದಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.
ಘಟನೆ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಆಸ್ಪತ್ರೆಯಲ್ಲಿದ್ದ ಅಗ್ನಿಶಾಮಕ ಘಟಕದ ಜೊತೆಗೆ ಕಟಕ್ ಅಗ್ನಿಶಾಮಕ ಠಾಣೆಯಿಂದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಸಹಕರಿಸಿದರು. ಕನಿಷ್ಠ ಮೂರು ಅಗ್ನಿಶಾಮಕ ವಾಹನಗಳು ಹಾಗೂ 30ಕ್ಕೂ ಹೆಚ್ಚು ಸಿಬ್ಬಂದಿಯನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿತ್ತು.
ಘಟನೆ ನಡೆದ ಸಮಯದಲ್ಲಿ ಐಸಿಯುನಲ್ಲಿ ಸಾಕಷ್ಟು ವೈದ್ಯರು ಹಾಗೂ ನರ್ಸ್ಗಳು ಇರದಿದ್ದ ಕಾರಣ ರೋಗಿಗಳನ್ನು ಸ್ಥಳಾಂತರಿಸುವಲ್ಲಿ ವಿಳಂಬ ಉಂಟಾಯಿತು ಎಂದು ಮೂಲಗಳು ತಿಳಿಸಿವೆ.
ಎಸ್ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಒಡಿಶಾದ ಅತಿದೊಡ್ಡ ಸರ್ಕಾರಿ ಆರೋಗ್ಯ ಸಂಸ್ಥೆಯಾಗಿದ್ದು, ಸಾವಿರಾರು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ.
ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಐಸಿಯುನಲ್ಲಿ ಇದ್ದ ಉಳಿದ ರೋಗಿಗಳನ್ನು ತಕ್ಷಣವೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರೋಗಿಗಳನ್ನು ರಕ್ಷಣೆ ಮಾಡುವ ವೇಳೆ 11 ಮಂದಿ ಆಸ್ಪತ್ರೆಯ ಸಿಬ್ಬಂದಿಗಳಿಗೂ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.





