ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಮಾರು 40 ಮಂದಿ ಗಾಯಗೊಂಡಿದ್ದಾರೆ.

ಕುಮಟಾ–ಶಿರಸಿ ಹೆದ್ದಾರಿಯ ಕೊಲಗಿಬೀಸ್ ಗ್ರಾಮದಲ್ಲಿ ಬಳಿ ವೇಗವಾಗಿ ಸಂಚರಿಸುತ್ತಿದ್ದ ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿವೆ.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಕುಮಟಾದಿಂದ ಶಿರಸಿಗೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆ ಸ್ಥಳೀಯ ನಿವಾಸಿಗಳನ್ನು ಬೆಚ್ಚಿಬೀಳಿಸಿದೆ. ಎರಡೂ ಬಸ್‌ಗಳ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಭಾರೀ ಸದ್ದು ಕೇಳುತ್ತಿದ್ದಂತೆ ಸ್ಥಳೀಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಸ್ಥಳದಲ್ಲಿ ಗಾಯಗೊಂಡವರ ಗೋಳಾಟ, ಕಿರುಚಾಟ ಮತ್ತು ಸಹಾಯಕ್ಕಾಗಿ ಕೂಗುತ್ತಿರುವುದು ಕಂಡು ಕೂಡಲೇ ರಕ್ಷಣೆಗೆ ಧಾವಿಸಿದ್ದಾರೆ.

ಶಿರಸಿ ಪೊಲೀಸರು ಸ್ಥಳಕ್ಕೆ ತಲುಪಿದ್ದು ಆಂಬ್ಯುಲೆನ್ಸ್‌ಗಳಿಗೆ ವ್ಯವಸ್ಥೆ ಮಾಡಲಾಗಿದೆ.

ಈ ಅಪಘಾತದಿಂದ ಹೊಸದಾಗಿ ನಿರ್ಮಿತ ರಸ್ತೆಯಲ್ಲಿ ಸಂಚಾರಕ್ಕೆ ಭಾರೀ ಅಡಚಣೆ ಉಂಟಾಗಿ, ಹಲವು ಕಿಲೋಮೀಟರ್‌ಗಳಷ್ಟು ವಾಹನಗಳು ಸಾಲಾಗಿ ನಿಂತಿದ್ದವು. ನಂತರ ಅಪಘಾತಕ್ಕೀಡಾದ ಬಸ್‌ಗಳನ್ನು ರಸ್ತೆ ಬದಿಗೆ ಸರಿಸಲಾಯಿತು. ಬಳಿಕ ಸಂಚಾರ ಸುಗಮಗೊಂಡಿತು.

ಅಪಘಾತದ ನಿಖರ ಕಾರಣ ತನಿಖೆ ಬಳಿಕ ತಿಳಿಯಲಿದೆ  ಎಂದು ಶಿರಸಿ ಉಪವಿಭಾಗ ಪೊಲೀಸ್ ಅಧಿಕಾರಿ ಗೀತಾ ಪಾಟೀಲ್  ಹೇಳಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ