– ರಾಘವೇಂದ್ರ ಅಡಿಗ ಎಚ್ಚೆನ್.
‘ಧುರಂಧರ್’ ಮತ್ತು ‘ಧುರಂಧರ್ 2’ ಚಿತ್ರಗಳು ಯಶಸ್ಸಿನ ಹಾದಿಯಲ್ಲಿ ಸಾಗುತ್ತಿರುವಾಗಲೇ, ಈಗ ಈ ಸಿನಿಮಾಗೆ ಸಂಬಂಧಿಸಿದಂತೆ ಹೊಸ ವಿವಾದ ತಲೆದೋರಿದೆ. ಕಥೆ ಬರಹಗಾರ ಸಂತೋಷ್ ಕುಮಾರ್ ಅವರು ‘ಧುರಂಧರ್ 2’ ಚಿತ್ರದ ಕಥೆ ತಮ್ಮದೇ ಎಂದು ಆರೋಪಿಸಿ ಸಂಚಲನ ಮೂಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಕಥೆಯನ್ನು ನಾನು ಹಲವು ನಿರ್ಮಾಣ ಸಂಸ್ಥೆಗಳಿಗೆ ವಿವರಿಸಿದ್ದೆ. ದೊಡ್ಡ ಮಟ್ಟದ ನಟರೊಂದಿಗೆ ಸಿನಿಮಾ ಮಾಡುವ ಯೋಜನೆಯೂ ಇತ್ತು. ಆದರೆ ನನ್ನ ಕಥೆಯನ್ನು ಕದ್ದು ಸಿನಿಮಾ ಮಾಡಿದ್ದಾರೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಆರೋಪಗಳಿಗೆ ಪ್ರತಿಕ್ರಿಯೆ ನೀಡಲು ನಿರ್ದೇಶಕ ಆದಿತ್ಯ ಧಾರ್ ಸಾರ್ವಜನಿಕವಾಗಿ ಮುಂದೆ ಬರದೇ, ಕಾನೂನು ಹಾದಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ವರದಿಗಳ ಪ್ರಕಾರ, ತಮ್ಮ ಕಾನೂನು ತಂಡದೊಂದಿಗೆ ಚರ್ಚಿಸಿ ಸಂತೋಷ್ ಕುಮಾರ್ ಅವರಿಗೆ ನೋಟಿಸ್ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಆದರೆ, ಈ ವಿಚಾರಕ್ಕೆ ಹೊಸ ತಿರುವು ನೀಡಿದ ಸಂತೋಷ್ ಕುಮಾರ್, “ನನಗೆ ಯಾವುದೇ ನೋಟಿಸ್ ಬಂದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಜೊತೆಗೆ, ಮೌನವಾಗಿರಲು ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿ, ನ್ಯಾಯಾಲಯದಲ್ಲಿ ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ.
ಇದರಿಂದ ಪ್ರಕರಣ ಮತ್ತಷ್ಟು ಗಂಭೀರಗೊಂಡಿದ್ದು, ಆಧಾರರಹಿತ ಆರೋಪಗಳನ್ನು ಮುಂದುವರಿಸುತ್ತಿದ್ದಾರೆ ಎಂಬ ಕಾರಣಕ್ಕೆ ಸಂತೋಷ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದಿತ್ಯ ಧಾರ್ ಸಿದ್ಧರಾಗಿದ್ದಾರೆ ಎಂದು ವರದಿಯಾಗಿದೆ.





