ಅಂತೂ ಇಂತೂ ಕರ್ನಾಟಕದ ಕಾಂಗ್ರೆಸ್​ ನಾಯಕತ್ವಕ್ಕೆ ಬುಧವಾರ ಸಂಜೆ ಅಂತಿಮ ತೆರೆ ಬಿದ್ದಂತಾಗಿದೆ. ಕಳೆದೊಂದು ವಾರದಿಂದ ದೆಹಲಿಯಲ್ಲಿ ನಡೆದ ಸುದೀರ್ಘ ಮೀಟಿಂಗ್ ಬಳಿಕ ಹಾಗೂ ಕರ್ನಾಟಕದಲ್ಲಿ ನಡೆದ ಸಭೆಗಳ ಬಳಿಕ ಕೊನೆಗೂ ಅಧಿಕಾರ ಹಸ್ತಾಂತರವಾಗಿದೆ. ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಅವರು ಡಿ.ಕೆ ಶಿವಕುಮಾರ್ ಅವರಿಗೆ ನಾಯಕತ್ವ ಬಿಟ್ಟುಕೊಟ್ಟಿದ್ದಾರೆ. ಅಂತಿಮವಾಗಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು.ಸತತ ಪ್ರಯತ್ನ, ಸುದೀರ್ಘ ಪರಿಶ್ರಮ, ಪಕ್ಷನಿಷ್ಠೆ, ಹೋರಾಟ, ಸಂಘಟನೆಯ ಸಾಮರ್ಥ್ಯ ಹಾಗೂ ಹೈಕಮಾಂಡ್ ಕೃಪೆಯಿಂದ ಡಿ.ಕೆ ಶಿವಕುಮಾರ್​ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. 8 ಬಾರಿ ಶಾಸಕರಾಗಿರುವ ಡಿ.ಕೆ ಶಿವಕುಮಾರ್ ಅವರಿಗೆ​​​​ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. 64 ವರ್ಷದ ದೊಡ್ಡ ಆಲಹಳ್ಳಿ ಕೆಂಪೇಗೌಡ ಶಿವಕುಮಾರ್ ಅವರು ಇತರೆ 13 ಹಿರಿಯ ಶಾಸಕರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು.ರಾಜ್ಯಪಾಲರು ನಿಗದಿ ಮಾಡಿದ್ದ ಸಂಜೆ 4 ಗಂಟೆ 5 ನಿಮಿಷಕ್ಕೆ ಶುರುವಾಗಬೇಕಿದ್ದ ಪ್ರಮಾಣ ವಚನ ಸಮಾರಂಭ ಐದು ನಿಮಿಷ ತಡವಾಗಿ ಆರಂಭವಾಯಿತು. ತಿಪಟೂರಿನ ನೊಣವಿನಕೆರೆ ಅಜ್ಜಯ್ಯ ಹೇಳಿದ ಸಲಹೆಯಂತೆ ಡಿ.ಕೆ ಶಿವಕುಮಾರ್ ಅವರು, ಸಂಜೆ 4 ಗಂಟೆ 14 ನಿಮಿಷಕ್ಕೆ ಸರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಿಕ್ಕಿರಿದು ತುಂಬಿದ ನಾಯಕರು, ಗಣ್ಯಾತಿಗಣ್ಯರು ಡಿಕೆಶಿ ಪ್ರಮಾಣಕ್ಕೆ ಸಾಕ್ಷಿಯಾದರು. ಸಮಾರಂಭ ಆರಂಭಕ್ಕೂ ಮುನ್ನ ಸದಾಶಿವನಗರದ ನಿವಾಸದಿಂದ ನೇರವಾಗಿ ಹೆಚ್​ ಎಎಲ್​ ಗೆ ಹೋದ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಬರಮಾಡಿಕೊಂಡರು. ಬಳಿಕ ಅದ್ಧೂರಿ ಸ್ವಾಗತದ ಮೂಲಕ ನೇರವಾಗಿ ಲೋಕಭವನಕ್ಕೆ ಕರೆತಂದರು. ಅದಾಗಲೇ ಲೋಕಭವನದಲ್ಲಿ ರಾಜ್ಯದ ಗಣ್ಯಾತಿಗಣ್ಯರು, ಸಿನಿಮಾ ನಟರು ಹಾಗೂ ಪಕ್ಷದ ನಾಯಕರು ಹಾಜರಿದ್ದರು.ನಂತರ 4 ಗಂಟೆ ಆಗುತ್ತಿದ್ದಂತೆ ವೇದಿಕೆ ಮೇಲೆ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭಾ ಸದಸ್ಯ ಕೆ.ಸಿ. ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಭಾಪತಿ ಬಸವರಾಜ್ ಹೊರಟ್ಟಿ, ಹಿರಿಯ ವಕೀಲ ಮುಕುಲ್ ರೋಹ್ಟಗಿ, ಜಾರ್ಖಂಡ ಮಾಜಿ ಸಿಎಂ ಅರ್ಜುನ್ ಮುಂಡಾ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ (ಕರ್ನಾಟಕ ಉಸ್ತುವಾರಿ) ರಣದೀಪ್ ಸಿಂಗ್ ಸುರ್ಜೇವಾಲಾ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಕೇರಳ ಸಿಎಂ ವಿ.ಡಿ. ಸತೀಶನ್, ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಸುಖು ಸೇರಿದಂತೆ ಗಣ್ಯಾತಿಗಣ್ಯರು ಆಸೀನರಾದರು. ಬಳಿಕ ನೆರೆದಿದ್ದವರಿಗೆ ನಮಸ್ಕರಿಸಿ ವೇದಿಕೆ ಮೇಲೆಯೇ ಅದಾಗಲೇ ಇಟ್ಟಿದ್ದ ಅಜ್ಜಯ್ಯನ ಫೋಟೋಗೆ ಪುಷ್ಪಾರ್ಚನೆ ನೆರವೇರಿಸಿದರು. ನಂತರ ಭಾರತೀಯ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು, ಶಿವಕುಮಾರ್ ಕರ್ನಾಟಕದ ಮುಖ್ಯಮಂತ್ರಿಯಾಗಿ ಶಿವಕುಮಾರ್ ವೀರ ಗಂಗಾಧರ ಅಜ್ಜಯ್ಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಡಿಕೆಶಿ ಬಳಿಕ ಹಿರಿಯ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಹಿರಿಯ ಶಾಸಕರಾದ ಕೆ.ಎಚ್. ​​ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಡಾ. ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್ ಮತ್ತು ಶರಣ್ ಪ್ರಕಾಶ್ ಪಾಟೀಲ್ ಕೂಡ ಪ್ರಮಾಣ ವಚನ ಸ್ವೀಕರಿಸಿದರು. ಯು.ಟಿ. ಖಾದರ್ ಮತ್ತು ಡಾ. ಯತೀಂದ್ರ ಹೊಸದಾಗಿ ಸೇರ್ಪಡೆಗೊಂಡಿದ್ದರೂ, ಉಳಿದವರು ಈ ಹಿಂದೆ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ