– ರಾಘವೇಂದ್ರ ಅಡಿಗ ಎಚ್ಚೆನ್.
ಇದೊಂದು ನವಿರಾದ ಒಲವಿನ ಕಥೆ,ಇದರಲ್ಲಿ ನಂಬಿಕೆ, ಸ್ನೇಹ, ಐಡೆಂಟಿಟಿಯ ವಿಷಯಗಳು ಇಲ್ಲಿವೆ.ಉತ್ತರ ಭಾರತದಿಂದ ಬರುವ ಹುಡುಗಿ ದಕ್ಷಿಣ ಭಾರತದ ಹುಡುಗನ ಎರಡು ಪಾತ್ರಗಳನ್ನು ಪ್ರಧಾನವಾಗಿ ಇಟ್ಟುಕೊಂಡು ಎರಡು ಸಂಸ್ಕೃತಿಗಳ ಅನಾವರಣವನ್ನು ಈ ಚಿತ್ರದಲ್ಲಿ ಮಾಡುವ ಪ್ರಯತ್ನ ಮಾಡಿದ್ದೇವೆ. ನಾನು ಇಲ್ಲಿಯವರೆಗೆ ಮಾಡಿರುವ ಸಿನಿಮಾಗಳಿಗಿಂತ ಸಂಪೂರ್ಣ ವಿಭಿನ್ನವಾಗಿರುವಂತ ಸಿನಿಮಾ ಇದಾಗಿದೆ ಎಂದು ನಿರ್ದೇಶಕ ಬಿ. ಎಂ. ಗಿರಿರಾಜ್ ಹೇಳಿದರು.

‘ಜಟ್ಟ’, ‘ಮೈತ್ರಿ’ ಮೊದಲಾದ ವಿಭಿನ್ನ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಬಿ. ಎಂ. ಗಿರಿರಾಜ್ ಅವರ ನಿರ್ದೇಶನದ ಹೊಸ ಚಿತ್ರದ ಶೀರ್ಷಿಕೆ ಮತ್ತು ಮೋಶನ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಬಾರಿ ‘ಕಲ್ಯಾಣಿ’ ಎಂಬ ಮತ್ತೊಂದು ವಿಭಿನ್ನ ಕಥಾಹಂದರವನ್ನು ತೆರೆಮೇಲೆ ತರಲಾಗುತ್ತಿದೆ. ಲೇಖಕ ಬಸವ ರೆಡ್ಡಿ ಅವರ ಕಥೆಯನ್ನು ಈಗ ಸಿನಿಮಾ ಮಾಡಲಾಗುತ್ತಿದೆ. ಚಿತ್ರ, ಸದ್ಯ ತನ್ನ ಸಂಪೂರ್ಣ ಚಿತ್ರೀಕರಣವನ್ನು ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿದೆ.
ಮೂರು ದಶಕಗಳಿಂದ ಕಾರ್ಯಕಾರಿ ನಿರ್ಮಾಪಕರಾಗಿ 45ಕ್ಕೂ ಹೆಚ್ಚು ಸಿನಿಮಾಗಳಿಗೆ ಕೆಲಸ ಮಾಡಿದ ಅನುಭವವಿರುವ ಕುಮಾರಸ್ವಾಮಿ ಆರ್. ‘ಆರ್. ಕೆ. ಸಿನೆಮಾಸ್’ ಬ್ಯಾನರಿನಲ್ಲಿ ಈ ಚಿತ್ರವನ್ನು ನಿರ್ಮಾಣ ಆಗುತ್ತಿದೆ.

ರಂಗಭೂಮಿಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಯುವ ನಟ ಸಾಮ್ರಾಟ್ ಶೆಟ್ಟಿ ‘ಕಲ್ಯಾಣಿ’ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಉತ್ತರ ಭಾರತದ ನಟಿ ಸಿಮ್ರನ್, ರಾಹುಲ್ ಜೇಟ್ಲಿ, ಶಮಂತ್ ರಾವ್, ಪಿ. ಡಿ. ಸತೀಶ್ ಚಂದ್ರ, ಯಮುನಾ ಶ್ರೀನಿಧಿ, ವಿಜಯ್ ಚೆಂಡೂರು, ಶೈಲೇಂದ್ರ, ರಂಗು ಸಮರ್ಪಣ್ ಸೇರಿದಂತೆ ಅನೇಕ ರಂಗಭೂಮಿ ಕಲಾವಿದರು ‘ಕಲ್ಯಾಣಿ’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಚಿತ್ರದ ಹಾಡುಗಳಿಗೆ ಬಿ. ಜೆ. ಭರತ್ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರಕ್ಕೆ ಪ್ರಶಾಂತ ಲಾಗರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ ಕಾರ್ಯವಿದೆ. ಭಟ್ಕಳ, ಬೆಂಗಳೂರು ಸುತ್ತಮುತ್ತ ಚಿತ್ರದ ಬಹುತೇಕ ಚಿತ್ರೀಕರಣ ಮಾಡಲಾಗಿದೆ. ಎಲ್ಲಾ ಅಂದುಕೊಂಡಂತೆ ನಡೆದರೆ, ಚಿತ್ರತಂಡ ಇದೇ ಸೆಪ್ಟೆಂಬರ್ ಅಥವಾ ಅಕ್ಟೋಬರ್ ವೇಳೆಗೆ ‘ಕಲ್ಯಾಣಿ’ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ತಯಾರಿಯಲ್ಲಿದ್ದಾರೆ.





