ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಶನಿವಾರ ವಿಧಿವಶವಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೂರ್ನಾಲ್ಕು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಚೆನ್ನಮ್ಮ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.

85 ವರ್ಷದ ಚೆನ್ನಮ್ಮ ಅವರು ಹಾಸನ ಜಿಲ್ಲೆಯ ಹೊಳೆ ನರಸೀಪುರ ತಾಲ್ಲೂಕಿನ ಹಿರೇಹಳ್ಳಿಯಲ್ಲಿ ಜನಿಸಿದ್ದರು. 1954 ಮೇ 25 ರಂದು ಹೆಚ್‌ಡಿ ದೇವೇಗೌಡರ ಜೊತೆಗೆ ವಿವಾಹವಾಗಿದ್ದರು. ಚೆನ್ನಮ್ಮ ಅವರು ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಈ ಸಂದರ್ಭ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ, ಚೆನ್ನಮ್ಮ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಸಾಕಷ್ಟು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎಂದು ಹೇಳಿದರು.

ಪತ್ನಿಯನ್ನು ಕಳೆದುಕೊಂಡು ದೇವೇಗೌಡರು ಕಣ್ಣೀರು ಹಾಕಿದ್ದಾರೆ. ಆಸ್ಪತ್ರೆಗೆ ಅವರು ವ್ಹೀಲ್ ಚೇರ್ ಮೂಲಕ ಆಗಮಿಸಿದ ಅವರು, ಕಣ್ಣೀರು ಹಾಕಿರುವ ದೃಶ್ಯ ಕಂಡು ಬಂತು. ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸ್ಥಳಕ್ಕೆ ದೌಡಾಯಿಸಿದರು.

ಪತಿಗೆ ಬೆನ್ನೆಲುಬಾಗಿದ್ದ ಪತ್ನಿ

ಚೆನ್ನಮ್ಮ ಅವರು ದೇವೇಗೌಡರ ರಾಜಕೀಯ ಜರ್ನಿಗೆ ಬೆನ್ನೆಲುಬಾಗಿದ್ದರು. ಚೆನ್ನಮ್ಮ ಅವರು ಎಸ್‌ಎಸ್‌ಎಲ್‌ಸಿ ವರೆಗೆ ಶಿಕ್ಷಣ ಪಡೆದಿದ್ದರು. 2001 ಫೆಬ್ರವರಿಯಲ್ಲಿ ಚೆನ್ನಮ್ಮ ಅವರ ಮೇಲೆ ಆಸಿಡ್ ದಾಳಿ ನಡೆದಿತ್ತು. ಹರದನಹಳ್ಳಿಯಲ್ಲಿ ದೇವಸ್ಥಾನಕ್ಕೆ ಹೋಗಿ ಬರುವಾಗ ಈ ಘಟನೆ ನಡೆದಿತ್ತು.

ಚೆನ್ನಮ್ಮ ಅವರು ಅಪಾರ ದೈವಭಕ್ತರಾಗಿದ್ದರು. ದೇವೇಗೌಡರ ರಾಜಕೀಯ ಏಳಿಗೆ ಹಾಗೂ ಕುಟುಂಬದ ಶ್ರೇಯಸ್ಸಿಗಾಗಿ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ, ಹೋಮ-ಹವನಗಳನ್ನು ನೆರವೇರಿಸುತ್ತಿದ್ದರು. ಹಾಸನದ ಹರದನಹಳ್ಳಿಯ ಈಶ್ವರ ದೇವಸ್ಥಾನ ಹಾಗೂ ಶೃಂಗೇರಿ ಶಾರದಾಂಬೆ ಎಂದರೆ ಇವರಿಗೆ ಅಪಾರ ಭಕ್ತಿ.

ಎಚ್‌ಡಿ ದೇವೇಗೌಡ ಹಾಗೂ ಚೆನ್ನಮ್ಮ ಅವರದ್ದು ಸುಮಾರು 72 ವರ್ಷಗಳ ದಾಂಪತ್ಯ ಜೀವನ. ಇತ್ತೀಚೆಗಷ್ಟೇ ಅವರು ವಿವಾಹ ವಾರ್ಷಿಕೋತ್ಸವನ್ನು ಆಚರಿಸಿದ್ದರು. ಜೊತೆಯಾಗಿಯೇ ಎಲ್ಲಾ ಕಡೆ ಓಡಾಡುತ್ತಿದ್ದರು.

ಗಣ್ಯರ ಸಂತಾಪ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನದಿಂದ ದುಃಖಿತನಾಗಿದ್ದೇನೆ. ಜನತಾ ಪರಿವಾರದಲ್ಲಿದ್ದ ನಾನು ದೇವೇಗೌಡರ ಕುಟುಂಬದೊಂದಿಗೆ ನಿಕಟವಾದ ಒಡನಾಟ ಇಟ್ಟುಕೊಂಡವನಾಗಿ ಚೆನ್ನಮ್ಮನವರನ್ನು‌ ಸಮೀಪದಿಂದ ಬಲ್ಲವನು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಚೆನ್ನಮ್ಮನವರು ತಮ್ಮ ಜೀವನದಲ್ಲಿ ಎದುರಾದ ಕಷ್ಟ – ನೋವುಗಳಿಂದ ಕುಗ್ಗದೆ, ಎಲ್ಲವನ್ನೂ ಧೈರ್ಯದಿಂದ ಎದುರಿಸಿದ್ದ ಗಟ್ಟಿಗಿತ್ತಿ. ದೇವೇಗೌಡರ ರಾಜಕೀಯ ಜೀವನದ ಏಳುಬೀಳಿನ ನಡುವೆ ದೊಡ್ಡ ಕುಟುಂಬವನ್ನು ಪೊರೆಯುತ್ತಾ ಬಂದ ಅವರು ಒಬ್ಬ ಆದರ್ಶ ಗೃಹಿಣಿಯಾಗಿದ್ದರು.

ಮಾಜಿ ಪ್ರಧಾನಿಗಳ ಮಡದಿಯಾಗಿದ್ದರೂ ಯಾವ ಹಮ್ಮು ಬಿಮ್ಮು ಇಲ್ಲದೆ ಎಲ್ಲರನ್ನೂ ಅಕ್ಕರೆಯಿಂದ ಕಾಣುತ್ತಿದ್ದ ಚೆನ್ನಮ್ಮನವರು, ಮಾದರಿ ಸತಿಯಾಗಿ ತುಂಬು ಜೀವನ ಸಾಗಿಸಿದವರು. ದೀರ್ಘಕಾಲದ ಸಂಗಾತಿಯನ್ನು ಈ ಇಳಿವಯಸ್ಸಿನಲ್ಲಿ ಕಳೆದುಕೊಂಡ ದೇವೇಗೌಡರಿಗೆ ದು:ಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದಿದ್ದಾರೆ.

 ಎಚ್.ಡಿ.ದೇವೇಗೌಡರ ಧರ್ಮಪತ್ನಿ ಹಾಗೂ ಎಚ್.ಡಿ.ರೇವಣ್ಣ, ಕುಮಾರಸ್ವಾಮಿ, ಅವರ ತಾಯಿ ಚನ್ನಮ್ಮ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವಾಗಿದೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಈ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬವರ್ಗದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ಭಗವಂತ ನೀಡಲಿ, ಹಿರಿಯ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಪ್ರಾರ್ಥಿಸಿದ್ದಾರೆ.

ಎಚ್.ಡಿ.ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ದೇವೇಗೌಡ ಅವರ ರಾಜಕೀಯ ಕ್ಷೇತ್ರದ ಸಾಧನೆಗೆ ಚೆನ್ನಮ್ಮ ಅವರ ಕೊಡುಗೆ ಮಹತ್ವದ್ದು ಎಂದು ತಿಳಿಸಿದ್ದಾರೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಚೆನ್ನಮ್ಮ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಚೆನ್ನಮ್ಮ ದೇವೇಗೌಡ ಅವರು ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಸರಳತೆ ಹಾಗೂ ತಾಳ್ಮೆಯ ಸಾಕಾರಮೂರ್ತಿಯಾಗಿದ್ದ ಅವರು, ಶ್ರೀ ದೇವೇಗೌಡರ ಸುದೀರ್ಘ ಸಾರ್ವಜನಿಕ ಜೀವನಕ್ಕೆ ಭದ್ರ ಬುನಾದಿಯಾಗಿ, ಇಡೀ ಕುಟುಂಬವನ್ನು ಮಮತೆಯಿಂದ ಮುನ್ನಡೆಸಿದ ಆದರ್ಶ ಮಾತೃಶಕ್ತಿಯಾಗಿದ್ದರು. ಅವರ ಅಗಲಿಕೆ ಗೌಡರ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿ ಬಳಗಕ್ಕೆ ತುಂಬಲಾರದ ನಷ್ಟವಾಗಿದೆ” ಎಂದಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ