ಮಳೆಯ ಅಬ್ಬರಕ್ಕೆ ಅಸ್ಸಾಂ ತತ್ತರಿಸಿದ್ದು, ಭಾರೀ ಮಳೆ ಮತ್ತು ಪ್ರವಾಹದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ಸಂಭವಿಸಿದ ಭೀಕರ ಪ್ರವಾಹದಲ್ಲಿ21 ಮಂದಿ ಮೃತಪಟ್ಟಿದ್ದು, ರಾಜ್ಯದ 16 ಜಿಲ್ಲೆಗಳ ಸುಮಾರು 5.64 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ASDMA) ತಿಳಿಸಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಸುರಿದ ಧಾರಾಕಾರ ಮಳೆಯಿಂದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಅನೇಕ ಗ್ರಾಮಗಳು ಸಂಪೂರ್ಣ ಜಲಾವೃತವಾಗಿವೆ. ರಸ್ತೆ ಸಂಪರ್ಕ ಕಡಿತಗೊಂಡಿರುವುದರಿಂದ ಸಾವಿರಾರು ಕುಟುಂಬಗಳು ತಾತ್ಕಾಲಿಕ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಯುವಂತಾಗಿದೆ. ಹಲವೆಡೆ ಸೇತುವೆಗಳು ಮತ್ತು ರಸ್ತೆಗಳಿಗೆ ಹಾನಿಯಾಗಿದ್ದು, ಸಂಚಾರ ವ್ಯವಸ್ಥೆಯೂ ಅಸ್ಥವ್ಯಸ್ಥವಾಗಿದೆ.

ಎಎಸ್‌ಡಿಎಂಎ ನೀಡಿರುವ ಮಾಹಿತಿಯ ಪ್ರಕಾರ, ಶಿವಸಾಗರ ಜಿಲ್ಲೆಯಲ್ಲಿ 13 ಮಂದಿ ಪ್ರವಾಹದಲ್ಲಿ ಮೃತಪಟ್ಟಿದ್ದಾರೆ. ಛರೈಡಿಯೋ ಜಿಲ್ಲೆಯಲ್ಲಿ ಐವರು, ಗೋಲಾಘಾಟ್‌ನಲ್ಲಿ ಇಬ್ಬರು ಹಾಗೂ ಜೋರ್‌ಹತ್‌ನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಪ್ರವಾಹದ ವೇಗ, ಭೂಕುಸಿತ ಹಾಗೂ ನೀರಿನ ಹರಿವಿನಲ್ಲಿ ಸಿಲುಕಿಕೊಂಡ ಪರಿಣಾಮ ಈ ಸಾವುಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ವರ್ಷದ ಮುಂಗಾರು ಮಳೆ ಮತ್ತು ಪ್ರವಾಹ ಸಂಬಂಧಿತ ಘಟನೆಗಳಿಂದ ಮೃತಪಟ್ಟವರ ಸಂಖ್ಯೆ ಈಗ 31ಕ್ಕೆ ಏರಿಕೆಯಾಗಿದೆ. ಹಲವೆಡೆ ಕೃಷಿ ಭೂಮಿಗಳು ಸಂಪೂರ್ಣ ಜಲಾವೃತವಾಗಿದ್ದು, ಬೆಳೆ ನಷ್ಟವೂ ವ್ಯಾಪಕವಾಗಿ ಉಂಟಾಗಿದೆ. ಮನೆಗಳು, ವಿದ್ಯುತ್ ಸಂಪರ್ಕ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯಗಳಿಗೆ ಹಾನಿಯಾಗಿರುವುದರಿಂದ ಜನರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.

ರಾಜ್ಯ ಸರ್ಕಾರ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆ (NDRF), ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಹಾಗೂ ಸ್ಥಳೀಯ ಆಡಳಿತ ತಂಡಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿವೆ. ಅಗತ್ಯ ಆಹಾರ, ಕುಡಿಯುವ ನೀರು ಮತ್ತು ವೈದ್ಯಕೀಯ ನೆರವು ಒದಗಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ