ಜಾಗೀರ್ದಾರ್*

ಬೆಂಗಳೂರು: ರಿಷಬ್‌ ಶೆಟ್ಟಿ ಅಭಿನಯದ ಬ್ಲಾಕ್‌ಬಸ್ಟರ್ ‘ಬೆಲ್ ಬಾಟಮ್’ ಖ್ಯಾತಿಯ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಹುಬ್ಬಳ್ಳಿ ಹಂಟರ್ಸ್’ ಸಿನಿಮಾ ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ಭರ್ಜರಿ ಮುನ್ನಡೆ ಸಾಧಿಸಿದೆ. ‘ಗೋಲ್ಡನ್ ಹಾರ್ಸ್ ಸಿನಿಮಾ’ ಬ್ಯಾನರ್‌ನಡಿ ಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಚಿತ್ರೀಕರಣವು ಜುಲೈ ತಿಂಗಳ ಆರಂಭದಲ್ಲೇ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಇದೀಗ ಚಿತ್ರದ ಡಬ್ಬಿಂಗ್ ಕೆಲಸಗಳು ಕೂಡ ಪೂರ್ಣಗೊಂಡಿವೆ. ದಿಗಂತ್ ನಟನೆಯ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಮೂಲಕ ಗಮನ ಸೆಳೆದಿದ್ದ ನಿರ್ದೇಶಕ ಸಮರ್ಥ್ ಬಿ. ಕಡಕೊಳ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದ್ದಾರೆ.

ಚಿತ್ರದ ಶೀರ್ಷಿಕೆಯೇ ಸೂಚಿಸುವಂತೆ ಇದು ಪಕ್ಕಾ ಉತ್ತರ ಕರ್ನಾಟಕದ ಸೊಗಡನ್ನು ಒಳಗೊಂಡಿರುವ ವಿಭಿನ್ನ ಕಥಾಹಂದರವನ್ನು ಹೊಂದಿದ್ದು, ಹುಬ್ಬಳ್ಳಿಯಲ್ಲೇ ಅದ್ಧೂರಿಯಾಗಿ ಮುಹೂರ್ತ ನೆರವೇರಿಸಿಕೊಂಡು ಶೂಟಿಂಗ್ ಆರಂಭಿಸಿತ್ತು. ಚಿತ್ರತಂಡವು ಮೊದಲ ಹಂತದಲ್ಲಿ 14 ದಿನಗಳ ಕಾಲ ಹುಬ್ಬಳ್ಳಿಯ ಪ್ರಮುಖ ಸ್ಥಳಗಳಲ್ಲಿ, ನಂತರ ಶಿರಸಿಯಲ್ಲಿ 22 ದಿನಗಳು ಹಾಗೂ ಧಾರವಾಡದಲ್ಲಿ 2 ದಿನಗಳ ಕಾಲ ಚಿತ್ರೀಕರಣ ನಡೆಸಿ ಒಟ್ಟಾರೆ ಶೂಟಿಂಗ್‌ ಕೆಲಸಗಳನ್ನು ಯಶಸ್ವಿಯಾಗಿ ಮುಗಿಸಿದೆ. ಸ್ಥಳೀಯ ಪರಿಸರ ಹಾಗೂ ಕಥೆಯ ನೈಜತೆಗೆ ತಕ್ಕಂತೆ ನೈಜ ತಾಣಗಳಲ್ಲೇ ಚಿತ್ರೀಕರಣ ನಡೆಸಿರುವುದು ಈ ಸಿನಿಮಾದ ಪ್ರಮುಖ ಆಕರ್ಷಣೆಯಾಗಿದೆ.

bellbottom

ಚೇತನ್ ಮಾರಂಬೀಡ್, ಪವನ್ ಕುಲಕರ್ಣಿ, ಸುಮಿತ್ ಸಂಕೋಜಿ, ನಮನ್ ಅರೋರ, ದೀಪಕ್ ರಾವ್, ಶಿವು ಗುಂಡಣ್ಣನವರ್, ವಿನಯ್ ದೊಡ್ಡಮನಿ, ಧನ್ಯ ಸುಜೀತ್, ಪವನ್ ಅಣ್ಣೆಗೇರಿ ಇವರೊಂದಿಗೆ ‘ಮಹಾನಟಿ’ ರಿಯಾಲಿಟಿ ಶೋ ಖ್ಯಾತಿಯ ಧನ್ಯಶ್ರೀ ಸುಜಿತ್ ಮತ್ತು ವನು ಪಾಟೀಲ್, ಮುಖ್ಯ ಭೂಮಿಕೆಯಲ್ಲಿದ್ದಾರೆ. ನಟರಾದ ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್ ಮತ್ತು ಕೃಷ್ಣ ಹೆಬ್ಬಾಳೆ ಅವರು ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ಬಹುತೇಕ ಸೋಷಿಯಲ್ ಮೀಡಿಯಾದ ಜನಪ್ರಿಯ ಕಂಟೆಂಟ್‌ ಕ್ರಿಯೇಟರ್ಸ್‌ ಕೂಡ ಬಣ್ಣ ಹಚ್ಚಿರುವುದು ಚಿತ್ರದ ಮತ್ತೊಂದು ವಿಶೇಷತೆಯಾಗಿದೆ.

ನಿರ್ದೇಶಕ ಸಮರ್ಥ್ ಬಿ. ಕಡಕೊಳ್ ಅವರೇ ಈ ಚಿತ್ರಕ್ಕೆ ಕಥೆ ಬರೆದಿದ್ದು, ರಾಹುಲ್ ವಿ. ಪಾರ್ವತಿಕರ್, ಅಮಿತ್ ಕಾರ್ವ್ಕರ್ ಮತ್ತು ಚೇತನ್ ಮರಂಬೀದ್ ಅವರೊಂದಿಗೆ ಸೇರಿ ಸಂಭಾಷಣೆ ರಚಿಸಿದ್ದಾರೆ. ಇನ್ನುಳಿದಂತೆ ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಅವರ ಛಾಯಾಗ್ರಹಣ ಹಾಗೂ ಪ್ರಸನ್ನ ಕೇಶವ ಅವರ ಸಂಗೀತ ನಿರ್ದೇಶನವಿದ್ದು, ಸದ್ಯದಲ್ಲೇ ಚಿತ್ರತಂಡ ತೆರೆಯ ಮೇಲೆ ಬರಲು ಸಿದ್ಧತೆ ನಡೆಸುತ್ತಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ