ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಟಿ. ರಘುಮೂರ್ತಿ ಅವರು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಇಲಾಖೆಯ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸೋಮವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನ ಸಭೆ ನಡೆಸಿದ ಅವರು,ಇಲಾಖೆಯ ಕಾರ್ಯವೈಖರಿ ಹಾಗೂ ವಿವಿಧ ಯೋಜನೆಗಳ ಅನುಷ್ಠಾನದ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು.

ಇಲಾಖೆಯಲ್ಲಿ ಈಗಾಗಲೇ ಕೈಗೊಂಡಿರುವ ಎಲ್ಲ ಯೋಜನೆಗಳ ಅನುಷ್ಠಾನದ ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಯಾವ ಯೋಜನೆಗಳು ಯಾವ ಹಂತದಲ್ಲಿವೆ? ಬಾಕಿ ಇರುವ ಕಾಮಗಾರಿಗಳು ಯಾವು? ಹಾಗೂ ಅವುಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಕ್ರಮಗಳೇನು ಎಂಬುದರ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಿದರು.

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಯೋಜನೆಗಳು ನೇರವಾಗಿ ಸಮಾಜದ ದುರ್ಬಲ ವರ್ಗಗಳ ಅಭಿವೃದ್ಧಿಗೆ ಸಂಬಂಧಿಸಿರುವುದರಿಂದ ಅವುಗಳ ಅನುಷ್ಠಾನದಲ್ಲಿ ವಿಳಂಬವಾಗಬಾರದು ಎಂಬುದನ್ನು ಸಭೆಯಲ್ಲಿ ಸ್ಪಷ್ಟಪಡಿಸಿದರು.

ಬಾಕಿ ಇರುವ ಯೋಜನೆಗಳನ್ನು ಗುರುತಿಸಿ, ಅವುಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿಶೇಷವಾಗಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳು ಶಿಕ್ಷಣ, ವಸತಿ, ಆರ್ಥಿಕ ಸಬಲೀಕರಣ, ಮೂಲಸೌಕರ್ಯ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿರುವುದರಿಂದ ಅವುಗಳ ಅನುಷ್ಠಾನದಲ್ಲಿ ಸಮನ್ವಯ ಮತ್ತು ವೇಗ ಅಗತ್ಯದು ಹೇಳಿದರು

ಸಭೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಕನಗವಲ್ಲಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ದುಡಘಂಟಿ, ಇಲಾಖೆಯ ನಿರ್ದೇಶಕ ಅಶೋಕ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ