Sj
ನಾಯಕನಾಗಿ ಎರಡು ದಶಕಗಳನ್ನು ಪೂರೈಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ, ಸಮೃದ್ಧಿ ವಿ ಮಂಜುನಾಥ್ ನಿರ್ಮಾಣದ ಹಾಗೂ ಶ್ರೀನಿವಾಸರಾಜು ನಿರ್ದೇಶನದ "ಬೃಂದಾ ವಿಹಾರಿ" ಚಿತ್ರದ ಎರಡನೇ ಹಾಡು "ರಾಧಾ ರಾಧಾ" ತುಮಕೂರಿನಲ್ಲಿ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ನಿರ್ಮಾಪಕ ಸಮೃದ್ಧಿ ಮಂಜುನಾಥ್ ಅವರೆ "ರಾಧಾ ರಾಧಾ" ಹಾಡನ್ನು ಸಹಸ್ರಾರು ಜನರ ಸಮ್ಮುಖದಲ್ಲಿ ಅನಾವರಣ ಮಾಡಿದರು. ಡಾ||ವಿ.ನಾಗೇಂದ್ರ ಪ್ರಸಾದ್ ಬರೆದಿರುವ, ಹೇಶಮ್ ಅಬ್ದುಲ್ ವಹಾಬ್ ಸಂಗೀತ ನೀಡಿರುವ, ಸಿದ್ ಶ್ರೀರಾಮ್ ಮತ್ತು ಚಿನ್ಮಯಿ ಹಾಡಿರುವ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ - ದೇವಿಕಾ ಭಟ್ ಅಭಿನಯಿಸಿರುವ ಈ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ "ರಾಧಾ ರಾಧಾ" ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ನನಗೂ ಹಾಗೂ ತುಮಕೂರಿಗೂ ಹತ್ತಿರದ ನಂಟು. ನಾನು ಓದಿದ್ದು ನೆಲಮಂಗಲದಲ್ಲಿ. ಆಗಾಗ ತುಮಕೂರಿಗೆ ಬರುತ್ತಿದ್ದೆ. ಈಗ ನನ್ನ ಅಭಿನಯದ "ಬೃಂದಾವಿಹಾರಿ" ಚಿತ್ರದ ಹಾಡು ತುಮಕೂರಿನಲ್ಲಿ ಬಿಡುಗಡೆಯಾಗಿದ್ದು ಬಹಳ ಖುಷಿಯಾಗಿದೆ. ಇನ್ನೂ, ನಾನು ನಾಯಕನಾಗಿ ಇಪ್ಪತ್ತು ವರ್ಷಗಳಾಗಿದೆ. ಈ ಸಂದರ್ಭದಲ್ಲಿ ನನ್ನ ಯಶಸ್ಸನ್ನು ಅಭಿಮಾನಿಗಳಿಗೆ ಅರ್ಪಿಸುತ್ತೇನೆ. ಅವರಿಂದಲೇ ಇದು ಸಾಧ್ಯವಾಗಿದ್ದು. ಇದೇ ಸಂದರ್ಭದಲ್ಲಿ ನನ್ನ ಎಲ್ಲಾ ಚಿತ್ರದ ನಿರ್ಮಾಪಕರಿಗೆ, ನಿರ್ದೇಶಕರಿಗೆ ಹಾಗೂ ತಂತ್ರಜ್ಞರಿಗೆ ಧನ್ಯವಾದ ತಿಳಿಸುತ್ತೇನೆ. ವಿಶೇಷ ಧನ್ಯವಾದವನ್ನು ಉದಯ ಟಿವಿಗೆ ಹೇಳುತ್ತೇನೆ. ಅಲ್ಲಿನ "ಕಾಮಿಡಿ ಟೈಮ್" ಕಾರ್ಯಕ್ರಮವೇ ನನ್ನನ್ನು ಚಿತ್ರರಂಗಕ್ಕೆ ಕರೆತಂದಿದ್ದು. "ಬೃಂದಾ ವಿಹಾರಿ" ಚಿತ್ರದ ಮೊದಲ ಹಾಡು "ರಾಮ ರಾಮ" ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. ಈಗ ಬಿಡುಗಡೆಯಾಗಿರುವ "ರಾಧಾ ರಾಧಾ" ಹಾಡು ಸಹ ಎಲ್ಲರಿಗೂ ಮೆಚ್ಚುಗೆಯಾಗಲಿದೆ. ನಿಮ್ಮೆಲ್ಲರ ಪ್ರೋತ್ಸಾಹ ಸದಾ ಇರಲಿ ಎಂದರು ಗೋಲ್ಡನ್ ಮೆಗಾ ಸ್ಟಾರ್ ಗಣೇಶ್.
"ಬೃಂದಾ ವಿಹಾರಿ" ಚಿತ್ರದಲ್ಲಿ ಏಳು ಹಾಡುಗಳಿದೆ. ಇಂದು ಎರಡನೇ ಹಾಡು ಅನಾವರಣವಾಗಿದೆ. ಈ ಸಂದರ್ಭದಲ್ಲಿ ನಾನು ನಿರ್ಮಾಪಕ ಸಮೃದ್ಧಿ ಮಂಜುನಾಥ್, ನಾಯಕ ಗಣೇಶ್ ಹಾಗೂ ಸಂಗೀತ ನಿರ್ದೇಶಕ ಹೇಶಮ್ ಅಬ್ದುಲ್ ನವಾಬ್ ಅವರಿಗೆ ಧನ್ಯವಾದ ಹೇಳುತ್ತೇನೆ. ಉಳಿದ ಹಾಡುಗಳು ಸಹ ಸುಮಧುರವಾಗಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದರು ನಿರ್ದೇಶಕ ಶ್ರೀನಿವಾಸರಾಜು.

"ಬೃಂದಾ ವಿಹಾರಿ" ನಮ್ಮ ಸಂಸ್ಥೆಯ ನಿರ್ಮಾಣದ ನಾಲ್ಕನೇ ಚಿತ್ರ. ಇಂದು ತುಮಕೂರಿನಲ್ಲಿ ಸಹಸ್ರಾರು ಜನರ ಉಪಸ್ಥಿತಿಯಲ್ಲಿ ನಮ್ಮ ಚಿತ್ರದ ಹಾಡು ಬಿಡುಗಡೆಯಾಗಿದ್ದು ಬಹಳ ಸಂತೋಷವಾಗಿದೆ ಎಂದು ನಿರ್ಮಾಪಕ ಸಮೃದ್ಧಿ ಮಂಜುನಾಥ್ ತಿಳಿಸಿದರು.
ಇದು ನನ್ನ ಮೊದಲ ಚಿತ್ರ. ಗಣೇಶ್ ಅವರ ಜೊತೆಗೆ ನಟಿಸಿದ್ದು ಖುಷಿಯಾಗಿದೆ. ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ ಎಂದರು ನಾಯಕಿ ದೇವಿಕಾ ಭಟ್. ಸಂಗೀತ ನಿರ್ದೇಶಕ ಹೇಶಮ್ ಅಬ್ದುಲ್ ವಹಾಬ್ ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.





