ಸರಸ್ವತಿ*
ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದ ಲ್ಲಿ ನಟಿಸಿರುವ ಮತ್ತು ಕೆ.ಮಂಜು - ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹು ನಿರೀಕ್ಷಿತ ಚಿತ್ರ "ಮಾರುತ" ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕಥಾಹಂದರ ಹೊಂದಿರುವ ಈ ಚಿತ್ರ ನವೆಂಬರ್ 21ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ನಡೆದ ಚಿತ್ರದ ಪ್ರೀ ರಿಲೀಸ್ ಇವೆಂಟ್ ನಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ಕಳೆದ ಒಂದು ವರ್ಷದ ಹಿಂದೆ ಶುರುವಾದ ಚಿತ್ರವಿದು. ಕಥೆ ಕೇಳಿ ಕೆ.ಮಂಜು ಹಾಗೂ ರಮೇಶ್ ಯಾದವ್ ನಿರ್ಮಾಣಕ್ಕೆ ಮುಂದಾದರು. ಶ್ರೇಯಸ್ ಮಂಜು ಹಾಗೂ ಬೃಂದಾ ಆಚಾರ್ಯ ನಾಯಕ - ನಾಯಕಿ ಅಂತ ನಿಗದಿಯಾದರು. ಚಿತ್ರದಲ್ಲಿ ಎಲ್ಲರ ಗಮನ ಸೆಳೆಯುವ ಪ್ರಮುಖಪಾತ್ರಕ್ಕೆ ಉತ್ತಮ ನಟರೊಬ್ಬರು ಬೇಕಿತ್ತು. ಆಗ ನಮಗೆ ನೆನಪಾಗಿದ್ದೆ ದುನಿಯಾ ವಿಜಯ್ ಅವರು. ಅಭಿನಯಿಸಲು ವಿಜಯ್ ಅವರು ಒಪ್ಪಿದ್ದು ಬಹಳ ಖುಷಿಯಾಯಿತು. ಇನ್ನೂ, ಇದು ನನ್ನ ನಿರ್ದೇಶನದ 51ನೇ ಚಿತ್ರ. ಇಷ್ಟು ಚಿತ್ರಗಳನ್ನು ನಿರ್ದೇಶನ ಮಾಡಿದ್ದರೂ, ಶರತ್ ಲೋಹಿತಾಶ್ವ ಅವರ ಜೊತೆಗೆ ನಾನು ಕೆಲಸ ಮಾಡಿರುವ ಮೊದಲ ಚಿತ್ರವಿದು. ರಂಗಾಯಣ ರಘು, ಸಾಧುಕೋಕಿಲ, ತಾರಾ, ಪ್ರಮೋದ್ ಶೆಟ್ಟಿ, ಸುಜಯ್ ಶಾಸ್ತ್ರಿ, ವಿನಯ್ ಬಿದ್ದಪ್ಪ, ರಣವ್ ಹೀಗೆ ದೊಡ್ಡ ತಾರಾಬಳಗವೇ ಇದೆ. ವಿಶೇಷಪಾತ್ರದಲ್ಲಿ ರವಿಚಂದ್ರನ್ ಅವರು ನಟಿಸಿದ್ದಾರೆ. ತಂತ್ರಜ್ಞರ ಸಹಕಾರವಂತೂ ಅಪಾರ. ಈಗಿನ ಮೊಬೈಲ್ ಯುಗದಲ್ಲಿ ನಾವು ನಮ್ಮ ಮಕ್ಕಳ ಬಗ್ಗೆ ಎಷ್ಟು ಗಮನ ಕೊಟ್ಟರೂ ಕಡಿಮೆ. ಅದರಲ್ಲೂ ಹೆಣ್ಣುಮಕ್ಕಳ ಮೇಲಂತೂ ವಿಶೇಷ ಗಮನ ಕೊಡಬೇಕು. ತಂದೆ - ತಾಯಿ ಮಕ್ಕಳ ಜೊತೆಗೆ ಸ್ವಲ್ಪ ಸಮಯ ಕೊಡಬೇಕು. ಇಲ್ಲದಿದ್ದರೆ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಚಿತ್ರದ ಮೂಲಕ ತೋರಿಸಿದ್ದೇವೆ. ಸಮಾಜಕ್ಕೆ ಒಂದೊಳ್ಳೆ ಸಂದೇಶ ನೀಡುವ ಚಿತ್ರವಿದು. ಈ ಚಿತ್ರವನ್ನು ಸದ್ಯದಲ್ಲೇ ಪೊಲೀಸ್ ಅಧಿಕಾರಿಗಳು ಹಾಗೂ ಮಹಿಳಾ ಆಯೋಗದವರು ವೀಕ್ಷಿಸಲಿದ್ದಾರೆ. ಈಗ ಬರುತ್ತಿರುವ "ಮಾರುತ" ಚಿತ್ರ ಬರೀ ಟ್ರೇಲರ್ ಇದ್ದ ಹಾಗೆ. "ಮಾರುತ 2" ಕೂಡ ಬರಲಿದೆ. ಆ ಚಿತ್ರದಲ್ಲಿ ದುನಿಯಾ ವಿಜಯ್ ಅವರು ಅಭಿನಯಿಸಲಿದ್ದಾರೆ. ಸ್ಕ್ರಿಪ್ಟ್ ವರ್ಕ್ ನಡೆಯುತ್ತಿದೆ ಎಂದು ನಿರ್ದೇಶಕ ಎಸ್ ನಾರಾಯಣ್ ತಿಳಿಸಿದರು.

ಮನುಷ್ಯನಿಗೆ ಎಲ್ಲದಕ್ಕಿಂತ ಶಿಸ್ತು ಹಾಗೂ ಸಮಯ ಪರಿಪಾಲನೆ ಮುಖ್ಯ. ನಾನು ಅದನ್ನು ಕಲಿತದ್ದು ಎಸ್ ನಾರಾಯಣ್ ಅವರಿಂದ. ಇನ್ನೂ, ಕೆ.ಮಂಜು ಅವರ ಜೊತೆಗೆ ಈಗಾಗಲೇ ಸಿನಿಮಾ ಮಾಡಿದ್ದೀನಿ. ರಮೇಶ್ ಯಾದವ್ ಅವರು ಮಂಜು ಅವರಿಗೆ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಶ್ರೇಯಸ್, ಬೃಂದಾ ಆಚಾರ್ಯ ಸೇರಿದಂತೆ ಎಲ್ಲಾ ಕಲಾವಿದರು ಅದ್ಭುತವಾಗಿ ನಟಿಸಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ದುನಿಯಾ ವಿಜಯ್.





