- ರಾಘವೇಂದ್ರ ಅಡಿಗ ಎಚ್ಚೆನ್.
ಝಾಂಬಿ ಡ್ರಗ್ಸ್ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ವಿಡಿಯೋ ಹಂಚಿಕೊಂಡ ಪ್ರಕರಣದಲ್ಲಿ ನಟ ದುನಿಯಾ ವಿಜಯ್ ಹಾಗೂ ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸಂಕಷ್ಟಕ್ಕೆ ಸಿಲುಕಿದ್ದಾರೆ.
ವಿಡಿಯೋ ಕುರಿತು ಸಮರ್ಪಕ ಮಾಹಿತಿ ಇಲ್ಲದೇ ಹಂಚಿಕೊಂಡಿರುವ ಹಿನ್ನೆಲೆ, ಅದನ್ನು ಬಳಿಕ ಡಿಲೀಟ್ ಮಾಡಿದ್ದರೂ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಡಿಲೀಟ್ ಆಗಿರುವ ವಿಡಿಯೋವನ್ನು ರಿಟ್ರೀವ್ ಮಾಡಲು ಬಾಗಲೂರು ಪೊಲೀಸರು ಇನ್ಸ್ಟಾಗ್ರಾಂ ಸಂಸ್ಥೆಗೆ ಪತ್ರ ಬರೆದಿದ್ದಾರೆ.
ಇದುವರೆಗೆ ಸುಳ್ಳು ಮಾಹಿತಿ ಹಂಚಿಕೆ ಪ್ರಕರಣದಲ್ಲಿ ಒಟ್ಟು 15 ಮಂದಿಗೆ ನೋಟಿಸ್ ಜಾರಿ ಮಾಡಲಾಗಿದೆ. ಇದೇ ವಿಡಿಯೋವನ್ನು ಹಂಚಿಕೊಂಡಿದ್ದ ದುನಿಯಾ ವಿಜಯ್ ಮತ್ತು ಭಾಸ್ಕರ್ ರಾವ್ ವಿರುದ್ಧವೂ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ಸಿದ್ಧರಾಗಿದ್ದಾರೆ. ವಿಡಿಯೋ ರಿಟ್ರೀವ್ ಆದ ಬಳಿಕ ಇಬ್ಬರನ್ನೂ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.
ವೈರಲ್ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಅಸಹಜವಾಗಿ ವರ್ತಿಸುತ್ತಿರುವ ದೃಶ್ಯ ಕಂಡುಬಂದಿತ್ತು. ಆದರೆ ಬೆಂಗಳೂರಿನಲ್ಲಿ ‘ಝಾಂಬಿ ಡ್ರಗ್ಸ್’ ಎಂಬುದೇ ಇಲ್ಲ, ಇದು ಕೇವಲ ವದಂತಿ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.





