ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹರುಷವ ಹೊಸತು ಹೊಸತು ತರುತಿದೆ. ಶ್ರೀ ದ. ರಾ. ಬೇಂದ್ರೆಯವರ ಈ ಜನಪ್ರಿಯ ಭಾವಗೀತೆಯನ್ನು ಕುಲವಧು ಚಲನಚಿತ್

ನಮ್ಮ ಹಿರೀಕರು ನಮ್ಮ ಹವಾಮಾನಕ್ಕೆ ಅನುಗುಣವಾಗಿಯೇ ಬಹುತೇಕ ಹಬ್ಬಗಳನ್ನು ಆಚರಿಸುವ ಪದ್ದತಿಯನ್ನು ರೂಢಿಮಾಡಿದ್ದಾರೆ. ಅಂತೆಯೇ ಪ್ರಕೃತಿಯೂ ತನ್ನ ಹಳೆಯದ್ದನೆಲ್ಲಾ ಕಳೆದು ಕೊಂಡು ಹೊಸ ಹೊಸದಾಗಿ ಚಿಗುರು ಎಲೆಗಳಿಂದ ಕಂಗೊಳಿಸುತ್ತಾ ಸೂರ್ಯನೂ ಕೂಡಾ ಕೆಲವೇ ದಿನಗಳ ಹಿಂದಷ್ಟೇ ದಕ್ಷಿಣಾಯನದಿಂದ ಉತ್ತರಾಯಣದ ಕಡೆಗೆ ತನ ಪಥ ಬದಲಿಸಿ ತನ್ನ ಪ್ರಖರತೆಯನ್ನು ಹೆಚ್ಚಿಸಿಕೊಂಡು ಎಲ್ಲವೂ ಹೊಸದಾಗಿಯೇ ಇರುವುದರಿಂದ ಚೈತ್ರಮಾಸದ ಶುದ್ಧ ಪ್ರತಿಪದವನ್ನು ಹೊಸ ವರ್ಷ ಯುಗಾದಿ ಹಬ್ಬ ಎಂದು ಆಚರಿಸುತ್ತೇವೆ. ಯುಗಾದಿ ಎಂಬ ಶಬ್ದವು ಸಂಸ್ಕೃತದ ಯುಗ ಮತ್ತು ಆದಿ ಎಂಬ ಎರಡು ಶಬ್ದಗಳ ಸಮ್ಮಿಳನವಾಗಿದೆ. ಇಲ್ಲಿ ಯುಗ ಎಂದರೆ ನಾವು ವರ್ಷೆಂದು ಭಾವಿಸಿಕೊಂಡು ಹೊಸವರ್ಷವೆಂದು ಆಚರಿಸುತ್ತೇವೆ.
ಹಿಂದುಗಳ ಪಾಲಿಗೆ ಹೊಸ ವರ್ಷದ ಆರಂಭವಾದ ಈ ಯುಗಾದಿಯನ್ನು ಒಂದೊಂದು ಕಡೆಗಳಲ್ಲಿ ಒಂದೊಂದು ರೀತಿಯಲ್ಲಿ ಆಚರಿಸಲಾಗುತ್ತದೆ. ಸೂರ್ಯ ಮತ್ತು ಚಂದ್ರನ ಚಲನೆಯ ಆಧಾರದ ಮೇಲೆ ತಮಿಳುನಾಡು, ಕೇರಳ ಮತ್ತು ಕರಾವಳಿ ಭಾಗದ ಕರ್ನಾಟಕದವರು ಸೌರಮಾನ ಯುಗಾದಿಯನ್ನು ಆಚರಿಸಿದರೆ, ಬಹುತೇಕ ಕರ್ನಾಟಕ ಮತ್ತು ಆಂದ್ರ ಪ್ರದೇಶದವರು ಚಾಂದ್ರಮಾನ ಯುಗಾದಿಯನ್ನು ಆಚರಿಸುತ್ತಾರೆ. ಅಂತೆಯೇ ಗೋವಾ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಯುಗಾದಿಯನ್ನು ಗುಢಿಪಾಡವಾ ಎಂಬ ಹೆಸರಿನಲ್ಲಿ ಪ್ರತಿಯೊಂದು ಮನೆಗಳ ಮುಂದೆಯೂ ಗುಢಿ (ರೇಷ್ಮೆಯ ಧ್ವಜ ಅಥವಾ ಬಟ್ಟೆ)ಯನ್ನು ಒಂದು ಕೋಲಿನ ತುದಿಗೆ ಕಟ್ಟಿ ಮನೆಯ ಮುಂದೆ ನಿಲ್ಲಿಸುವ ಪದ್ದತಿ ಇದೆ.
ನಮಗೆ ಕಾಣುವ ಪ್ರತ್ಯಕ್ಷ ದೇವರುಗಳಲ್ಲಿ ಚಂದ್ರ ಮತ್ತು ಸೂರ್ಯ ಇಬ್ಬರಾಗಿದ್ದು ಅವುಗಳ ಚಲನವಲನದ ಆಧಾರದ ಮೇಲೆ ಚಾಂದ್ರಮಾನ ಮತ್ತು ಸೌರಮಾನ ಯುಗಾದಿ ಎಂಬ ಎರಡು ರೀತಿಯಲ್ಲಿ ಆಚರಿಸುವ ಸಂಪ್ರದಾಯವಿದೆ. ಚಂದ್ರನ ಚಲನೆಯನ್ನು ಆಧರಿಸಿ ವರ್ಷದಲ್ಲಿನ ದಿನಗಳನ್ನು ಲೆಕ್ಕಮಾಡುವುದಕ್ಕೆ ಚಾಂದ್ರಮಾನ ಎಂದು ಕರೆಯಲಾಗುತ್ತದೆ. ನಮಗೆ ಎಲ್ಲರಿಗೂ ತಿಳಿದಿರುವಂತೆ ಸೂರ್ಯನ ಸುತ್ತ ಭೂಮಿ ಸುತ್ತುತ್ತಿದ್ದು, ಭೂಮಿಯ ಸುತ್ತಾ ಚಂದನು ಸುತ್ತುತ್ತಾನೆ. ಹೀಗೆ ಚಂದ್ರ ಭೂಮಿಯನ್ನು ಒಂದು ಸುತ್ತು ಹಾಕುವುದಕ್ಕೆ ಸುಮಾರು 27 ದಿನಗಳು ಬೇಕಾಗುತ್ತದೆ. ಇನ್ನು ಒಂದು ತಿಂಗಳನ್ನು ಎರಡು ಪಕ್ಷಗಳಾಗಿ ವಿಂಗಡಿಸಿದ್ದು, ಅಮಾವಾಸ್ಯೆಯಿಂದ ಹುಣ್ಣಿಮೆಯವರೆಗೂ ಕೃಷ್ಣ ಪಕ್ಷ ಎಂದು ಮತ್ತು ಹುಣ್ಣಿಮೆಯಿಂದ ಅಮಾವಾಸ್ಯೆಯವರೆಗೂ ಶುಕ್ಲ ಪಕ್ಷ ಎಂದು ಕರೆಯಲಾಗುತ್ತದೆ. ಒಂದು ವರ್ಷದಲ್ಲಿ 12 ತಿಂಗಳು ಗಳು ಇದ್ದು ಚೈತ್ರ, ವೈಶಾಖ, ಜ್ಯೇಷ್ಠ, ಆಷಾಢ, ಶ್ರಾವಣ, ಭಾದ್ರಪದ, ಆಶ್ವಯುಜ, ಕಾರ್ತಿಕ, ಮಾರ್ಗಶೀರ್ಷ, ಪುಷ್ಯ, ಮಾಘ, ಫಾಲ್ಗುಣ ಎಂಬುದಾಗಿದ್ದು, ಈ ತಿಂಗಳುಗಳ ಹೆಸರು ಬರಲು ಒಟ್ಟು ೨೭ ನಕ್ಷತ್ರಗಳಲ್ಲಿ ಮೊದಲ ೧೨ ನಕ್ಷತ್ರಗಳು ಕಾರಣವಾಗಿವೆ. ಪಾಲ್ಗುಣ ಮಾಸದ ಅಮಾವಾಸ್ಯೆ ಕಳೆದು ಪಾಡ್ಯದ ದಿನ ಚಿತ್ರ ನಕ್ಷತ್ರ ಇರುವ ಕಾರಣ ಆ ತಿಂಗಳನ್ನು ಚೈತ್ರ ಮಾಸ ಎಂದು ಕರೆಯಾಗುತ್ತದೆ, ಚೈತ್ರ ಮಾಸದ ಅಮಾವಾಸ್ಯೆಯ ನಂತರ ಪಾಡ್ಯದ ದಿನ ವಿಶಾಖಾ ನಕ್ಷತ್ರ ಬರುವ ಕಾರಣ ಆ ತಿಂಗಳನ್ನು ವೈಶಾಖ ಮಾಸ ಎಂದು ಕರೆಯಲಾಗುತ್ತದೆ ಹೀಗೆ ಪ್ರತಿಯೊಂದು ತಿಂಗಳ ಹಿಂದೆ ನಕ್ಷತ್ರಗಳ ಹೆಸರು ಇದೆ, ಹಾಗಾಗಿಯೇ ಚಾಂದ್ರಮಾನದ ಯುಗಾದಿಯ ದಿನ ಕಾಲ ಕಾಲಕ್ಕೆ ಬದಲಾಗುತ್ತಿರುತ್ತದೆ.






