ಕಾಲಾತೀತ, ಮೌಲ್ಯಾಧಾರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಭಗವದ್ಗೀತೆಯನ್ನು ಶಾಲಾ-ಕಾಲೇಜು, ವಿಶ್ವವಿದ್ಯಾಲಯ ಮಾತ್ರವಲ್ಲ ಶಿಕ್ಷಣದ ಪ್ರತೀ ಹಂತದಲ್ಲಿಯೂ ಪಠ್ಯವಾಗಬೇಕು ಎಂದಿರುವ ಅವರು, ಭಗವದ್ಗೀತೆಯನ್ನು ಪಠ್ಯದಲ್ಲಿ ಸೇರ್ಪಡೆ ಮಾಡುವಂತೆ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ಬಗ್ಗೆ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ನಮ್ಮ ನೆಲದ ಪವಿತ್ರ ಗ್ರಂಥ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಪಠ್ಯದ ಮೂಲಕ ಬೋಧಿಸಬೇಕು, ಆ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ಧರ್ಮೇಂದ್ರ ಪ್ರಧಾನ್​ ಅವರಿಗೆ ಪತ್ರ ಬರೆದು ವಿನಂತಿಸಿದ್ದೇನೆ ಎಂದಿದ್ದಾರೆ.

ನಿಷ್ಕಾಮ ಕರ್ಮದ ಕಾಲಾತೀತ ಮೌಲ್ಯಗಳು, ಪ್ರಾಮಾಣಿಕತೆ ಮತ್ತು ನೈತಿಕ ಶಕ್ತಿಯು ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ಹೆಚ್ಚು ಉತ್ಕೃಷ್ಟಗೊಳಿಸುತ್ತದೆ ಮತ್ತು ನಮ್ಮ ಯುವಜನರು ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ಪ್ರಜೆಗಳಾಗಿ ರೂಪುಗೊಂಡು ಜಾಗತಿಕವಾಗಿ ಶ್ರೇಷ್ಠರಾಗಲು ಸ್ಫೂರ್ತಿ, ಪ್ರೇರಣೆ ನೀಡುತ್ತದೆ. ಅತ್ಯಂತ ಶ್ರೇಷ್ಠ, ಮಾನವೀಯತೆಯ ಭಾರತೀಯ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಸಂಕಲ್ಪಕ್ಕೆ ಅನುಗುಣವಾಗಿ ಭಗವದ್ಗೀತೆ ಬೋಧನೆ ಅಗತ್ಯವಿದೆ ಎಂದು ನಾನು ಬಲವಾಗಿ ನಂಬಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಪತ್ರದಲ್ಲಿ ಏನಿದೆ?: ಭಾರತವು ಬಹಳ ಹಿಂದಿನಿಂದಲೂ ಸಂತರು, ಜ್ಞಾನ ಮತ್ತು ಶಾಶ್ವತ ನಾಗರಿಕ ಮೌಲ್ಯಗಳನ್ನು ಹೊಂದಿರುವ ನಾಡು. ಸನಾತನ ಧರ್ಮವು ವಸುದೈವ ಕುಟುಂಬಕಂ ಎಂಬ ಸಾರ್ವತ್ರಿಕ ಆದರ್ಶವನ್ನು ಎತ್ತಿಹಿಡಿಯುತ್ತದೆ. ಶ್ರೀಕೃಷ್ಣನು ಅರ್ಜುನನಿಗೆ ಬೋಧಿಸಿದ ಭಗವದ್ಗೀತೆಯು ಪರಮಜ್ಞಾನವಾಗಿದ್ದು, ಇದು ನಿಷ್ಕಾಮ ಕರ್ಮ ಮತ್ತು ಪ್ರಾಮಾಣಿಕತೆ ಹಾಗೂ ಸಮರ್ಪಣೆಯೊಂದಿಗೆ ಪ್ರತಿಯೊಬ್ಬರೂ ಕರ್ತವ್ಯ ನಿರ್ವಹಿಸುವ ಮಹತ್ವವನ್ನು ಒತ್ತಿ ಹೇಳುತ್ತದೆ. ಈ ಮೌಲ್ಯಗಳು ವಿಶೇಷವಾಗಿ ಪ್ರಸ್ತುತ ಜಾಗತಿಕ ಪರಿಸರದಲ್ಲಿ ಅಪಾರ ಪ್ರಸ್ತುತತೆಯನ್ನು ಹೊಂದಿವೆ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಇತ್ತೀಚೆಗೆ ಪ್ರಧಾನ ಮಂತ್ರಿಗಳು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರು ಹಿಂದೂ ಧರ್ಮದ ಮೂಲ ತತ್ವಗಳನ್ನು ಎತ್ತಿಹಿಡಿದು ವಸುದೈವ ಕುಟುಂಬಕಂ ಪರಿಕಲ್ಪನೆಯನ್ನು ಬಗ್ಗೆ ಒತ್ತಿ ಹೇಳಿದ್ದಾರೆ. ಆ ಪವಿತ್ರ ಗ್ರಂಥ ಹೊಂದಿರುವ ಕಾಲಾತೀತ ಮೌಲ್ಯಗಳನ್ನು ಪುನರುಚ್ಚರಿಸಿದರು ಎಂಬುದನ್ನು ಶಿಕ್ಷಣ ಸಚಿವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಗೀತಾ ಪಠಣ ಕಾರ್ಯಕ್ರಮಕ್ಕೆ ಹಾಜರಾಗುವ ಸೌಭಾಗ್ಯ ನನಗೂ ಸಿಕ್ಕಿತ್ತು. ಅದೊಂದು ಸ್ಫೂರ್ತಿದಾಯಕ ಕಾರ್ಯಕ್ರಮವಾಗಿತ್ತು. ಗೀತೆಯನ್ನು ಪಠಿಸಲು ಮತ್ತು ಅದಕ್ಕೆ ಸಂಬಂಧಿಸಿದ ಆಳವಾದ ಶಕ್ತಿ ಮತ್ತು ಭಕ್ತಿಯನ್ನು ಅನುಭವಿಸಲು ಅದ್ಭುತ ಅವಕಾಶ ನೀಡಿತು. ಹಲವಾರು ಸ್ಥಳೀಯ ನಾಯಕರು ಮತ್ತು ಪೋಷಕರು ಭಗವದ್ಗೀತೆಯ ಬೋಧನೆಗಳನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಬೇಕೆಂದು ವಿನಂತಿಸಿದರು ಎಂಬ ಅಂಶದ ಬಗ್ಗೆ ಸಚಿವರ ಗಮನಕ್ಕೆ ತಂದಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ (NEP) ಮೌಲ್ಯಾಧರಿತ ಶಿಕ್ಷಣಕ್ಕೆ ಒತ್ತು ನೀಡುತ್ತದೆ. ಗೀತೆಯಿಂದ ಆಯ್ದ ಬೋಧನೆಗಳನ್ನು ಪರಿಚಯಿಸುವುದರಿಂದ ವಿದ್ಯಾರ್ಥಿಗಳಲ್ಲಿ ನೈತಿಕ ಶಕ್ತಿ, ಚಿಂತನೆಯ ಸ್ಪಷ್ಟತೆ ಮತ್ತು ವ್ಯಕ್ತಿತ್ವ ಬೆಳೆಸಲು ಸಹಾಯ ಮಾಡುತ್ತದೆ. ಇದರಿಂದಾಗಿ ನಮ್ಮ ಜನಸಂಖ್ಯಾ ಲಾಭಾಂಶವನ್ನು ಬಲಪಡಿಸುತ್ತದೆ. ನಮ್ಮ ಯುವಕರು ಜಾಗತಿಕವಾಗಿ ಶ್ರೇಷ್ಠರಾಗಲು ಪ್ರೇರಕವಾಗುತ್ತದೆ. ಆದ್ದರಿಂದ, ಭಗವದ್ಗೀತೆಯ ಕಾಲಾತೀತ ಮೌಲ್ಯಗಳನ್ನು ದೇಶಾದ್ಯಂತ ವಿದ್ಯಾರ್ಥಿಗಳ ಕಲಿಕೆಯ ಚೌಕಟ್ಟಿನಲ್ಲಿ ಅರ್ಥಪೂರ್ಣವಾಗಿ ಸಂಯೋಜಿಸಲು ಈ ಪ್ರಸ್ತಾವನೆಗೆ ಸರಿಯಾದ ಪರಿಗಣನೆಯನ್ನು ನೀಡಿ ಸೂಕ್ತ ನಿರ್ದೇಶನಗಳನ್ನು ನೀಡಬೇಕೆಂದು ಕುಮಾರಸ್ವಾಮಿ ಕೋರಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ