ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಇಂದು ಮುಂಜಾನೆ ಸಿಲಿಂಡರ್ ಸ್ಫೋಟ ಸಂಭವಿಸಿ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬುವರಿಗೆ ಸೇರಿದ ಪಿಜಿಯಲ್ಲಿ ಈ ಅವಘಡ ಸಂಭವಿಸಿದೆ. ಈ ಪಿಜಿಯನ್ನು ನಾಗರಾಜ್ ರೆಡ್ಡಿ ಅವರು ಬೇರೆಯವರಿಗೆ ಲೀಸ್ ನೀಡಿದ್ದರು ಎನ್ನಲಾಗಿದೆ. ಇಂದು ಮುಂಜಾನೆ ಸುಮಾರು 6 ಗಂಟೆಯ ಸುಮಾರಿಗೆ ಕಾರ್ಮಿಕರು ಎದ್ದೇಳುವ ಸಮಯದಲ್ಲಿ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಪಿಜಿಯಲ್ಲಿದ್ದವರು ದಿಕ್ಕಾಪಾಲಾಗಿ ಓಡಿದ್ದಾರೆ.
ಈ ಪಿಜಿಯಲ್ಲಿ ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕೆಲಸಕ್ಕಾಗಿ ಬಂದಿದ್ದ 10ಕ್ಕೂ ಹೆಚ್ಚು ಕಾರ್ಮಿಕರು ವಾಸವಾಗಿದ್ದರು. ಗಾಯಗೊಂಡವರೆಲ್ಲರೂ ಹೊರರಾಜ್ಯದವರಾಗಿದ್ದು, ಎಲ್ಲರಿಗೂ ಗಂಭೀರ ಸ್ವರೂಪದ ಸುಟ್ಟ ಗಾಯಗಳಾಗಿವೆ. ತಕ್ಷಣವೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಫೋಟದ ತೀವ್ರತೆಗೆ ಕಟ್ಟಡದ ಭಾಗಗಳಿಗೂ ಹಾನಿಯಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.





