ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 'ಗೃಹ ಜ್ಯೋತಿ' ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಫಲಾನುಭವಿಗಳ ಮಾಹಿತಿ ಪರಿಶೀಲನೆ ಕಾರ್ಯ ಜುಲೈ 1 ರಿಂದ ಆರಂಭವಾಗಿದ್ದು, ಬಾಡಿಗೆದಾರರು ಆಧಾರ್ ಮಾಹಿತಿ ಅಪ್ಡೇಟ್ ಕುರಿತು ಗೊಂದಲ ಪಡಬೇಕಾಗಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.
ಬೆಸ್ಕಾಂ ಮೀಟರ್ ರೀಡರ್ ಹಾಗೂ ಸಿಬ್ಬಂದಿ ಗೃಹ ಜ್ಯೋತಿ ಫಲಾನುಭವಿಗಳ ಮನೆ ಮನೆ ಸಮೀಕ್ಷೆ ಕಾರ್ಯ ನಡೆಸುವ ವೇಳೆ, ಹಳೆಯ ಬಾಡಿಗೆದರರ ಆಧಾರ್ ವಿವರ ತೆಗೆದು ಹಾಕಿ ಈಗಿರುವ ಬಾಡಿಗೆದಾರರ ಆಧಾರ್ ವಿವರಗಳನ್ನು ಅಪ್ಡೇಟ್ ಮಾಡಿಕೊಳ್ಳಲಾಗುವುದು. ಹಾಗಾಗಿ ಯೋಜನೆ ಸ್ಥಗಿತಗೊಳ್ಳಲಿದೆ ಎಂಬ ಆತಂಕ ಬೇಡ ಎಂದು ಬೆಸ್ಕಾಂ ತಿಳಿಸಿದೆ.
ಈ ಹಿಂದೆ ಇದ್ದ ಬಾಡಿಗೆದಾರರ ಆಧಾರ್ ಮಾಹಿತಿಯಿಂದಾಗಿ ತಮಗೆ ಯೋಜನೆ ಸ್ಥಗಿತಗೊಳ್ಳಲಿದೆಯೇ ಎಂಬ ಆತಂಕ ಈಗಿರುವ ಬಾಡಿಗೆದಾರರಿಗೆ ಬಂದಿರಿರುವ ಹಿನ್ನೆಲೆಯಲ್ಲಿ ಬೆಸ್ಕಾಂ ಈ ಸ್ಪಷ್ಟನೆ ನೀಡಿದೆ.
ಸಮೀಕ್ಷೆ ವೇಳೆ ಹಳೆಯ ಬಾಡಿಗೆದಾರರ ಆಧಾರ್ ಕಾರ್ಡ್ ಮತ್ತು ವಿವರಗಳನ್ನು ತೆಗೆದುಹಾಕಿ, ಹೊಸ ಬಾಡಿಗೆದಾರರ ಆಧಾರ್ ಸಂಖ್ಯೆ ನಮೂದು ಮಾಡಿಕೊಳ್ಳಲಾಗುವುದು. ಹೀಗಾಗಿ ಗೃಹ ಜ್ಯೋತಿ ಯೋಜನೆಯ ಸೌಲಭ್ಯ ನಿಲ್ಲುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.
ಬಾಡಿಗೆದಾರರು ತಮ್ಮ ವಿವರಗಳನ್ನು ಬದಲಾಯಿಸಲು ಯಾವುದೇ ಕಚೇರಿಗೆ ಹೋಗಬೇಕಾದ ಅಗತ್ಯವಿಲ್ಲ. ಬೆಸ್ಕಾಂ ಸಿಬ್ಬಂದಿ ನಿಮ್ಮ ಮನೆ ಬಾಗಿಲಿಗೆ ಬಂದು ಸಮೀಕ್ಷೆಯ ಸಮಯದಲ್ಲಿ ನಿಮ್ಮ ಆಧಾರ್ ಮತ್ತು ಬಾಡಿಗೆ/ ಲೀಸ್ ಕರಾರು ವಿವರಗಳನ್ನು ಅಪ್ಡೇಟ್ ಮಾಡಲಿದ್ದಾರೆ.
ಈ ಪ್ರಕ್ರಿಯೆ ಕೇವಲ ಫಲಾನುಭವಿಗಳ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿರುವ ಸಾಮಾನ್ಯ ಪ್ರಕ್ರಿಯೆಯಾಗಿದೆ. ಆದ್ದರಿಂದ ಬಾಡಿಗೆದಾರರು ಯಾವುದೇ ಆತಂಕವಿಲ್ಲದೆ ಬೆಸ್ಕಾಂ ತಂಡಕ್ಕೆ ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸಬೇಕಾಗಿ ವಿನಂತಿ. ಜೊತೆಗೆ ಮನೆ ಮಾಲೀಕರು ಕೂಡ ತಮ್ಮ ಬಾಡಿಗೆದಾರರಿಗೆ ಈ ಪ್ರಕ್ರಿಯೆಯಲ್ಲಿ ಸೂಕ್ತ ಮಾರ್ಗದರ್ಶನ ನೀಡಿ ಬೆಂಬಲಿಸುವಂತೆ ಕೋರಲಾಗಿದೆ.
ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆಗೆ ಬೆಸ್ಕಾಂ ಸಹಾಯವಾಣಿ ಆರಂಭಿಸಿದೆ. ಹೆಚ್ಚಿನ ಮಾಹಿತಿ ಅಥವಾ ಗೊಂದಲಗಳಿದ್ದಲ್ಲಿ ಗ್ರಾಹಕರು ತಮ್ಮ ಹತ್ತಿರದ ಬೆಸ್ಕಾಂ ಉಪ-ವಿಭಾಗದ ಕಚೇರಿ ಸಂಪರ್ಕಿಸಬಹುದು ಅಥವಾ ಕೆಳಗಿನ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದು. ಈಗಾಗಲೇ ಬೆಸ್ಕಾಂ ಗೃಹ ಜ್ಯೋತಿ ಯೋಜನೆಯ ಮನೆ-ಮನೆ ಪರಿಶೀಲನೆ ವೇಳೆ, ಫಲಾನುಭವಿಗಳ ಪ್ರವರ್ಗ ಅಥವಾ ಜಾತಿ ಮಾಹಿತಿ ನೀಡುವುದನ್ನು ಕಡ್ಡಾಯಗೊಳಿಸದಿರಲು ತೀರ್ಮಾನಿಸಿದೆ. ಜಾತಿ ಮಾಹಿತಿ ನೀಡುವ ಕ್ರಮಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬೆಸ್ಕಾಂ ಈ ನಿರ್ಧಾರ ಕೈಗೊಂಡಿದೆ. ಗೃಹ ಜ್ಯೋತಿ ಫಲಾನುಭವಿಗಳಿಗೆ 7ರಲ್ಲಿ 1 ದಾಖಲೆ ಸಲ್ಲಿಕೆ ಕಡ್ಡಾಯವಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಬೆಸ್ಕಾಂ ಸಹಾಯವಾಣಿ ಸಂಖ್ಯೆ: 1912. ವಿಶೇಷ ವಾಟ್ಸಾಪ್ (WhatsApp) ಸಂಖ್ಯೆಗಳು: 9480816111, 9480816112, 9480816113, 9480816114.





