ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಅಕ್ಟೋಬರ್ 17 ರಂದು ಮೈಸೂರು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಈಗಾಗಲೇ 24000 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 221 ಕಂಪನಿಗಳು ಭಾಗವಹಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್ ಪಾಟೀಲ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಮೇಳದಲ್ಲಿ ಭಾಗವಹಿಸಲು ಹಾಗೂ ನೇರವಾಗಿ ಕಾರ್ಯಕ್ರಮದ ದಿನದಂದು ಆಗಮಿಸಿ ಹೆಸರು ನೋಂದಾಯಿಸಿಕೊಳ್ಳಬಹುದು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು https://udyogamela.ksdckarnataka.comಗೆ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು
ಉದ್ಯೋಗ ಮೇಳದಲ್ಲಿ 221 ಕಂಪನಿಗಳು ಭಾಗವಹಿಸಲು ಹೆಸರು ನೋಂದಾಯಿಸಿಕೊಂಡಿದ್ದು, ಸ್ಥಳೀಯ ಕಂಪನಿಗಳು ಸಹ ಹೆಸರು ನೋಂದಾಯಿಸಿಕೊಳ್ಳಲಿವೆ. ಉದ್ಯೋಗದಾತರು ಸುಮಾರು 45000 ಉದ್ಯೋಗ ಖಾಲಿ ಇರುವುದಾಗಿ ಮಾಹಿತಿ ನೀಡಿದ್ದು, ಅಭ್ಯರ್ಥಿಗಳ ಕೌಶಲ್ಯಗಳ ಮೇಲೆ ಕಂಪನಿಗಳು ಆಯ್ಕೆ ಮಾಡಿಕೊಳ್ಳಲಿದೆ ಎಂದು ವಿವರಿಸಿದರು.ಉದ್ಯೋಗ ಮೇಳದಲ್ಲಿ ಭಾಗವಹಿಸಿದ ನಂತರ ಉದ್ಯೋಗ ಸಿಗದೇ ಇರುವ ಅಭ್ಯರ್ಥಿಗಳ ವಿವರ ಸಹ ಪಡೆದುಕೊಂಡು ಅವರಿಗೆ ಬೇಕಿರುವ ಕೌಶಲ್ಯಗಳ ಬಗ್ಗೆ ತರಬೇತಿ ನೀಡಲಾಗುವುದು. ಇದರಿಂದ ಮುಂದಿನ ದಿನಗಳಲ್ಲಿ ಅವರು ಸಹ ಉದ್ಯೋಗ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದರು.
ಯುವನಿಧಿ ಯೋಜನೆಯಡಿ ನೋಂದಣಿಯಾಗಿರುವ ಅಭ್ಯರ್ಥಿಗಳಿಗೆ ಯುವನಿಧಿ ಪ್ಲಸ್ ಯೋಜನೆಯಡಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ. ಬಹಳಷ್ಟು ಮಂದಿಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಹೆಸರು ನೋಂದಾಯಿಸಿಕೊಂಡರೆ ಯುವನಿಧಿ ಯೋಜನೆಯಡಿ ನೀಡಲಾಗುತ್ತಿರುವ ಭತ್ಯೆ ನಿಂತುಹೋಗುತ್ತದೆ ಎಂಬ ತಪ್ಪು ಕಲ್ಪನೆಯಿದೆ. ಯುವನಿಧಿ ಯೋಜನೆಯಡಿ ತಿಳಿಸಿರುವಂತೆ 2 ವರ್ಷ ಅಥವಾ ಕೆಲಸ ಸಿಗುವವರೆಗೆ ಯಾವುದು ಮೊದಲು ಅಲ್ಲಿಯವರೆಗೆ ನಿರುದ್ಯೋಗ ಭತ್ಯೆ ನೀಡಲಾಗುವುದು. ಯುವನಿಧಿ ಪ್ಲಸ್ ಯೋಜನೆಯಡಿ ನೀಡಲಾಗುವ ಕೌಶಲ್ಯ ತರಬೇತಿಗೆ ಹೆಚ್ಚು ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಳ್ಳಿ ಎಂದರು.
ಈ ಹಿಂದೆ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನಡೆಸಿದ 6 ಉದ್ಯೋಗ ಮೇಳದಲ್ಲಿ 12966 ಅಭ್ಯರ್ಥಿಗಳು ಉದ್ಯೋಗ ಪಡೆದಿದ್ದಾರೆ. ಕಾಲೇಜುಗಳ ಸಹಯೋಗದೊಂದಿಗೆ ನಡೆಸಿದ 3 ಉದ್ಯೋಗ ಮೇಳದಲ್ಲಿ 1177 ಅಭ್ಯರ್ಥಿಗಳಿಗೆ ಉದ್ಯೋಗ ದೊರಕಿದೆ. ಉದ್ಯೋಗ ಮೇಳದಲ್ಲಿ ಕನಿಷ್ಠ ಹಾಗೂ ಗರಿಷ್ಠ ವಿದ್ಯಾರ್ಹತೆ ಹೊಂದಿರುವವರಿಗೂ ಉದ್ಯೋಗಾವಕಾಶವಿದೆ ಎಂದು ಸಚಿವ ಡಾ. ಪಾಟೀಲ್ ತಿಳಿಸಿದರು.
ಕೌಶಲ್ಯ ಬೆಳೆಸಿಕೊಳ್ಳಲು ಅವಕಾಶ: ಯುವನಿಧಿ ಯೋಜನೆಯಡಿ ರಾಜ್ಯಾದ್ಯಂತ 3 ಲಕ್ಷ ಹಾಗೂ ಮೈಸೂರು ವಿಭಾಗದಲ್ಲಿ 43500 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಅವರಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲಾಗುತ್ತಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವುದರಿಂದ ಪರೋಕ್ಷವಾಗಿ ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರು, ನೇರ ಸಂಪರ್ಕ ಸಾಧಿಸಬಹುದು. ಯಾವ ತಂತ್ರಜ್ಞಾನ, ಕೌಶಲ್ಯಗಳಿಗೆ ಹೆಚ್ಚು ಬೇಡಿಕೆ ಇದೆ ಎಂಬುದನ್ನು ತಿಳಿದುಕೊಂಡು, ಕೌಶಲ್ಯಗಳನ್ನು ಬೆಳೆಸಿಕೊಳ್ಳಬಹುದು ಎಂದರು.
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾಂತ ನಾಯಕ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಜಿ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಎನ್ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.